ಧಾರವಾಡ (prajakiran. com) ಮೇ.29: ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು.
ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ.16 ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದಲ್ಲು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಜಿಲ್ಲೆಯ ಧಾರವಾಡ ತಾಲೂಕಿನ ಯಾದವಾಡ ಮತ್ತು ಗರಗದಲ್ಲಿ ಜಿಲ್ಲಾಡಳಿತ ತೆರೆದಿರುವ ಕೋವಿಡ್ ಕಾಳಜಿ (ಕೇರ್ ಸೆಂಟರ್) ಕೇಂದ್ರಗಳನ್ನು ಪರಿಶೀಲಿಸಿದರ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ 34 ಕೋವಿಡ್ ಕೇರ್ ಸೆಂಟರ್ಗಳನ್ನು ಆರಂಭಿಸಲಾಗಿದ್ದು, 14 ನಗರ ಪ್ರದೇಶಗಳಲ್ಲಿ ಮತ್ತು 20 ಗ್ರಾಮೀಣ ಪ್ರದೇಶಗಳಲ್ಲಿ ಆರಂಭವಾಗಿವೆ. ಕೋವಿಡ್ ಸೋಂಕು ಹರಡುವಿಕೆ ನಿಧಾನವಾಗಿ ಕಡಿಮೆಯಾಗುತ್ತಿದ್ದು ಜಿಲ್ಲೆಯಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಕಿಮ್ಸ್ ಆಸ್ಪತ್ರೆಯನ್ನು ಒಳಗೊಂಡಂತೆ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 2400 ಬೆಡ್ ಗಳಿದ್ದು, 1990 ಬೆಡ್ ಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು 410 ಬೆಡ್ಗಳು ಖಾಲಿ ಇವೆ.
ಜಿಲ್ಲೆಯಲ್ಲಿ ಈಗಾಗಲೇ ಬೆಡ್ ಮತ್ತು ವೆಂಟಿಲೇಟರ್ಗಳ ಕುರಿತ ಒತ್ತಡ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಎಮ್.ಆರ್.ಪಿ.ಸಿ, ಆಯ್.ಓ..ಸಿ.ಎಲ್ ಮತ್ತು ಎಲ್ ಆ್ಯಂಡ್ ಟಿ . ಕಂಪನಿಗಳು ಜಿಲ್ಲೆಗಳಿಗೆ ಆಕ್ಸಿಜನ್ ಪ್ಲಾಂಟ್ಗಳನ್ನು ಕೊಡುಗೆ ನೀಡಲಾಗಿದ್ದು ಸದ್ಯದಲ್ಲೇ ಭೂಮಿ ಪೂಜೆ ಮಾಡಿ ಅವುಗಳನ್ನು ಕಾರ್ಯಾರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.