ಧಾರವಾಡ prajakiran.com ಮೇ.26: ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಹೊಸದಾಗಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿತ್ತು. ಇದುವರೆಗೆ ಒಟ್ಟು 9 ಅಭ್ಯರ್ಥಿಗಳಿಂದ 18 ನಾಮಪತ್ರಗಳು ಸಲ್ಲಿಕೆಯಾಗಿವೆ.
ಪಕ್ಷೇತರ ಅಭ್ಯರ್ಥಿಗಳಾದ ಫಕೀರಗೌಡ ವಿರೂಪಾಕ್ಷಗೌಡ ಕಲ್ಲನಗೌಡ್ರ, ವಿನಾಯಕ ವಿ.ಕೆ. ಅವರು ದ್ವಿಪ್ರತಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳಾಗಿರುವ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು.
ಕಾಂಗ್ರೇಸ್ ಅಭ್ಯರ್ಥಿ ಬಸವರಾಜ ಗುರಿಕಾರ, ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ಗುಡದಿನ್ನಿ ಮತ್ತೊಮ್ಮೆ ನಾಮಪತ್ರವನ್ನು ಸಲ್ಲಿಸಿದರು.
ನಾಳೆ ಮೇ.27 ರಂದು ಬೆಳಗಾವಿಯಲ್ಲಿ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಸಮ್ಮುಖದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.