ಕೋವಿಡ್-19 ಸೋಂಕು ಹರಡದಂತೆ ಕ್ರಮ
ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ
ಧಾರವಾಡ prajakiran.com : ಜಿಲ್ಲೆಯ ಜಿಲ್ಲಾಸ್ಪತ್ರೆ ಹಾಗೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಅನಾವಶ್ಯಕವಾಗಿ ತಿರುಗಾಡುವ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸುವಂತೆ ಧಾರವಾಡ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಕಿಮ್ಸ್ ಆಸ್ಪತ್ರೆಯ ನಿರ್ದೇಶಕರಿಗೆ ಈ ಕುರಿತು ಕ್ರಮ ಜರುಗಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರದ ಆದೇಶದಂತೆ ಏ.27 ರಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಕಫ್ರ್ಯೂ ಜಾರಿಯಲ್ಲಿದ್ದು, ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ರೋಗಿ ಹಾಗೂ ರೋಗಿಯ ಪರಿಚಾರಕರಿಗೆ ಸಡಿಲಿಕೆ ನೀಡಲಾಗಿದೆ.
ಆದರೆ ಈ ಸಡಿಲಿಕೆಯನ್ನು ದುರುಪಯೋಗಪಡಿಸಿಕೊಂಡು, ಜಿಲ್ಲಾಸ್ಪತ್ರೆ ಹಾಗೂ ಕಿಮ್ಸ್ ಆವರಣದಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ತಿರಗಾಡುತ್ತಿರುವುದು ಹಾಗೂ ವೈದ್ಯಕೀಯ ಚಿಕಿತ್ಸೆ ಅಥವಾ ರೋಗಿಯ ಪರಿಚಾರಕರೆಂದು ನೆಪ ಹೇಳಿ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ಕಂಡು ಬಂದಿದೆ.
ಆದ್ದರಿಂದ ರೋಗಿಗಳಿಗೆ ಹಾಗೂ ಅಗತ್ಯವಿದ್ದಲ್ಲಿ ರೋಗಿಯೊಂದಿಗೆ ಒಬ್ಬ ಪರಿಚಾರಕರಿಗೆ ಮತ್ತು ಜಿಲ್ಲಾಸ್ಪತ್ರೆ ಹಾಗೂ ಕಿಮ್ಸ್ ಆಸ್ಪತ್ರೆಗಳಿಗೆ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆದುಕೊಳ್ಳುವ ಬಗ್ಗೆ ಅವಶ್ಯಕ ದಾಖಲೆಗಳನ್ನು ಹೊಂದಿದ್ದಲ್ಲಿ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕೆಂದು ತಿಳಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.