ಚಿಕ್ಮಮಗಳೂರು Prajakiran.com : ಬಿ.ಎಂ.ಟಿ.ಸಿ ಯಿಂದ ಪ್ರಾರಂಭಿಸಿದ್ದ ಆಕ್ಸಿಜನ್ ಬಸ್ ಸೇವೆ ಇದೀಗ ಚಿಕ್ಕಮಗಳೂರಿನಲ್ಲಿಯೂ ಕೆ.ಎಸ್.ಆರ್.ಟಿ.ಸಿ.ಯ ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸೋಮವಾರದಿಂದ ಬಸ್ಸಿನಲ್ಲಿಯೇ ಆಕ್ಸಿಜನ್ ಒದಗಿಸಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ.
ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ.
ಡಢಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಸವದಿಯವರು ವಿವರಿಸಿದ್ದಾರೆ.
ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು.
ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ.
ಏಕಕಾಲಕ್ಕೆ 8 ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸವದಿಯವರು ಸ್ಪಷ್ಟಪಡಿಸಿದ್ದಾರೆ.