ಧಾರವಾಡ prajakiran. com ಮೇ.27: ಕೋವಿಡ್-19 ಪ್ರಯುಕ್ತ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳಿಗೆ ಸರ್ಕಾರವು ನಿಗದಿ ಪಡಿಸಿರುವ ದರದಂತೆ ಆಸ್ಪತ್ರೆ ಮತ್ತು ಚಿಕಿತ್ಸಾ ವೆಚ್ಚವನ್ನು ಮಾತ್ರ ತೆಗೆದುಕೊಳ್ಳಬೇಕೆಂದು ಈಗಾಗಲೇ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ.
ಆಸ್ಪತ್ರೆಗಳಲ್ಲಿ ಸರ್ಕಾರದ ನಿಯಮಾನುಸಾರ ಆಸ್ಪತ್ರೆ ಮತ್ತು ಚಿಕಿತ್ಸಾ ವೆಚ್ಚವನ್ನು ಮಾತ್ರ ತೆಗೆದುಕೊಂಡಿರುವ ಬಗ್ಗೆ ಹಾಗೂ ಇತರೆ ಕೋವಿಡ್-19 ನಿಯಮಗಳನ್ನು ಪಾಲನೆ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲು ತಪಾಸಣಾ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ ಅವರು ಆದೇಶಿಸಿದ್ದಾರೆ.
ಜಿಲ್ಲೆಯ ವಿವಿಧ 31 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯ ವಿವಿಧ ವೈದ್ಯ ಅಧಿಕಾರಿಗಳನ್ನು ತಪಾಸಣಾ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ತಮಗೆ ನಿಗದಿಪಡಿಸಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಪ್ರತಿ ಆಸ್ಪತೆಯಿಂದ ಕನಿಷ್ಟ 25 ಚಿಕಿತ್ಸೆ ಪಡೆದಿರುವ ಹಾಗೂ ಪಡೆಯುತ್ತಿರುವ ಕೋವಿಡ್-19 ರೋಗಿಗಳ ದಾಖಲಾತಿ ಮತ್ತು ಬಿಲ್ಲುಗಳನ್ನು ತಪಾಸಣೆ ಮಾಡಿ, ಸರ್ಕಾರದ ನಿಯಮಗಳನ್ನು ಪಾಲನೆ ಮಾಡಿರುವ ಬಗ್ಗೆ ಪರಿಶೀಲಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಲು ಅವರು ಆದೇಶದಲ್ಲಿ ತಿಳಿಸಿದ್ದಾರೆ.