ಬೆಂಗಳೂರು prajakiran.com : ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದೆ.
ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಾರೆ.
ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದರು. ಅಪರಾಧ ಎಸಗಿದವರು ಈಶಾನ್ಯ ರಾಜ್ಯಗಳಿಂದ ಬಂದವರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದರು.
ವೈರಲ್ ಆದ ವಿಡಿಯೋ ಆಧಾರವಾಗಿಟ್ಟುಕೊಂಡು ಬೆಂಗಳೂರು ಪೊಲೀಸರು ವಿಚಾರಣೆ ಆರಂಭಿಸಿದರು. ಈ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ.
ಪ್ರಕರಣದಲ್ಲಿ ನಾಲ್ವರು ಯುವಕರು ಮತ್ತು ಇಬ್ಬರು ಮಹಿಳೆಯರು ಭಾಗಿಯಾಗಿದ್ದಾರೆ. ಅವರು ನೀಡಿರುವ ಹೇಳಿಕೆ ಪ್ರಕಾರ ಇನ್ನೂ ಕೆಲ ಆರೋಪಿಗಳು ಕೇರಳದಲ್ಲಿ ಇದ್ದಾರೆ.
ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಈ ಪ್ರಕರಣವನ್ನು ಮೇಲುಸ್ತುವಾರಿ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.
ಇಂತಹ ಕೃತ್ಯ ಸಹಿಸೋಕೆ ಆಗಲ್ಲ : ಸಿಎಂ
ಬೆಂಗಳೂರು Prajakiran.com : ಬೆಂಗಳೂರಿನಲ್ಲಿ ಬಾಂಗ್ಲಾದೇಶ ಮೂಲದ 23 ವರ್ಷದ ಯುವತಿಯ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಮಾತನಾಡಿದ್ದು, ಇದು ಅಮಾನುಷ ಕೃತ್ಯ. ಇದಕ್ಕೆ ಕ್ಷಮೆ ಇಲ್ಲಾ ಎಂದಿದ್ದಾರೆ.
ಇಂತಹ ಕೃತ್ಯವೆಸಗಿದವರಿಗೆ ತಕ್ಕ ಶಿಕ್ಷೆಯಾಗಲಿದೆ. ಇದನ್ನು ಸಹಿಸೋಕೆ ಆಗಲ್ಲ.
ಇವರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು. ಕಾನೂನಡಿ ಇದಕ್ಕೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.