*ವಾಲ್ಮೀಕಿ ಅಭಿವೃದ್ಧಿ ನಿಗಮದ 94.73 ಕೋಟಿ ಅಕ್ರಮ ವರ್ಗಾವಣೆ ಆರೋಪ*
*ಸಿಎಂ ಭೇಟಿಯಾಗಿ ಸಚಿವ ಬಿ ನಾಗೇಂದ್ರ ರಾಜೀನಾಮೆ*
*ಬಿಜೆಪಿ ಹೋರಾಟದ ಬೆನ್ನಲ್ಲೇ ಸಚಿವ ಸಂಪುಟದ ಮೊದಲ ವಿಕೆಟ್ ಪತನ*
ಬೆಂಗಳೂರು ಪ್ರಜಾಕಿರಣ.ಕಾಮ್ : ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರದ ಮೊದಲ ವಿಕೆಟ್ ಕೊನೆಗೂ ನಿರೀಕ್ಷೆಯಂತೆ ಪತನಗೊಂಡಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದ ಬಿ. ನಾಗೇಂದ್ರ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಒಂದು ಸಾಲಿನ ರಾಜೀನಾಮೆ ನೀಡಿದರು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ನಾಗೇಂದ್ರ, ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ನಿರಪರಾಧಿಯಾಗಿ ಹೊರಬಂದ ಮೇಲೆ ಮತ್ತೆ ಸಿಎಂ ಭೇಟಿ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದಿನ ಬಿಜೆಪಿ ಸರಕಾರವನ್ನು ನಲವತ್ತು ಪರ್ಸೆಂಟ್ ಸರಕಾರ ಎಂದು ಕರೆದಿದ್ದ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದ ಆರೋಪ ಕೇಳಿ ಬಂದಿತ್ತು
ಇದಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಸಾವಿಗೂ ಮುನ್ನ ಡೆತ್ ನೂತ್ ಬರೆದಿಟ್ಟು, ಸಚಿವರ ಮೌಖಿಕ ಅಣತಿಯಂತೆ 94.73 ಕೋಟಿ ಹಣವನ್ನು ಹೈದ್ರಾಬಾದ್ ಖಾಸಗಿ ಕಂಪನಿಗೆ ವರ್ಗಾವಣೆ ಮಾಡಲಾಯಿತು ಎಂದು ನೊಂದುಕೊಂಡಿದ್ದರು.
ಅಲ್ಲದೆ, ಅವರ ಕುಟುಂಬದ ಸದಸ್ಯರು ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಒತ್ತಾಯಿಸಿದ್ದರು.
ಇದನ್ನು ಪ್ರಬಲ ಅಸ್ತ್ರವನ್ನಾಗಿ ಮಾಡಿಕೊಂಡ ಬಿಜೆಪಿ ಬಹುಕೋಟಿ ಹಗರಣ ಆಗಿದ್ದರಿಂದ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಭಟನೆ ನಡೆಸಿತ್ತು.
ಅಲ್ಲದೆ, ಈ ಸಂಬಂಧ ರಾಜ್ಯಪಾಲರ ಭೇಟಿ ಮಾಡಿ ಮನವಿ ಕೂಡ ಸಲ್ಲಿಸಿತ್ತು.
ಪ್ರಕರಣದಲ್ಲಿ ಸಿಬಿಐ ಮಧ್ಯಪ್ರವೇಶಿಸಿದ ಒಙದು ದಿನದ ನಂತರ ಸಚಿವ ಸಂಪುಟದ ಮೊದಲ ವಿಕೆಟ್ ಪತನಗೊಂಡಂತಾಗಿದೆ.
ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದಾರೆ.