ಸುರಪುರ (ಯಾದಗಿರಿ) prajakiran.com : ತಡರಾತ್ರಿ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.17 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಕಳೆದ ಅನೇಕ ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆ ದೊಡ್ಡ ಅವಾಂತರವನ್ನು ಸೃಷ್ಟಿಸಿದೆ. ಅಲ್ಲದೆ ಎಲ್ಲ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಬೃಹತ್ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ.
ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದರು ಕಳೆದ ಮೂರ್ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿದ್ದು, ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿದೆ.
ಈ ಹಿನ್ನೆಲೆ ನಾರಾಯಣಪುರದ ಬಸವಸಾಗರ ಜಲಾಶಯ ಕೂಡ ಭರ್ತಿಯಾಗಿದ್ದು ಹೆಚ್ಚಿನ ನೀರು ಕೃಷ್ಣ ನದಿಗೆ ಹರಿಬಿಡಲಾಗಿದೆ.
ನಿನ್ನೆಯವರೆಗೆ 1.50 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿ ಬಿಡಲಾಗಿತ್ತು. ಆದರೆ ನಿನ್ನೆ ಸಂಜೆಯಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿವು 2.20 ಲಕ್ಷ ಕ್ಯೂಸೆಕ್ ನೀರು ಬರುತ್ತಿರುವುದರಿಂದ ಕೃಷ್ಣಾ ನದಿಗೆ 2.17 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ.
ಇದರಿಂದಾಗಿ ನದಿಪಾತ್ರದಲ್ಲಿ ಬರುವ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಛಾಯಾಭಗವತಿ ದೇವಸ್ಥಾನಕ್ಕೆ ನೀರು ನುಗ್ಗಿದ್ದು ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.
ಕೃಷ್ಣ ಅಚ್ಚುಕಟ್ಟು ಪ್ರದೇಶದ ಗ್ರಾಮಗಳಲ್ಲಿ ಮತ್ತೆ ಪ್ರವಾಹದ ಭೀತಿ ಕಾಣಿಸಿಕೊಂಡಿದೆ.
ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ನದಿಪಾತ್ರದ ಗ್ರಾಮಗಳಾದ ತಿಂಥಣಿ ಶೆಳ್ಳಗಿ, ಮುಷ್ಠಳ್ಳಿ, ಸೂಗುರು, ಹೆಮ್ಮಡಗಿ ಸೇರಿದಂತೆ ಅನೇಕ ಗ್ರಾಮಗಳಲ್ಲಿನ ಜನರು ಜಾನುವಾರುಗಳು ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ :ರಾಗಪ್ರೀಯಾ ಆರ್ ತಿಳಿಸಿದ್ದಾರೆ.