ಧಾರವಾಡ prajakiran.com : ತಾಲೂಕಿನ ಕವಲಗೇರಿ ಗ್ರಾಮದ ಬಳಿ ಸೋಮವಾರ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ಕವಲಗೇರಿ ಹಾಗೂ ಸುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ.
ಇತ್ತೀಚೆಗೆ ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಳಿ ಸಾರ್ವಜನಿಕರಿಗೆ ಕಬ್ಬಿನ ಗದ್ದೆಯಲ್ಲಿ ಕಂಡಿದ್ದ ಚಿರತೆ, ಇದೀಗ ಅಲ್ಲಿಂದ ಕವಲಗೇರಿ ಕಡೆಗೆ ಬಂದಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.
ನಿನ್ನೆ ಸಂಜೆ ಕವಲಗೇರಿ ಗ್ರಾಮದ ಸಮೀಪ ಇಬ್ಬರಿಗೆ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ಅರಣ್ಯ ಇಲಾಖೆಯ ಧಾರವಾಡ ವಲಯ ಅರಣ್ಯ ಸಂರಕ್ಷಣಾಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವದಲ್ಲಿ ಸಿಬ್ಬಂದಿ ಚಿರತೆ ಶೋಧನೆಯಲ್ಲಿ ತೊಡಗಿದ್ದಾರೆ.
ಗ್ರಾಮದ ಪ್ರತ್ಯಕ್ಷದರ್ಶಿಗಳ ಪ್ರಕಾರ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಚಿರತೆಯ ಸಂಚಾರವನ್ನು ಖಚಿತಪಡಿಸಿದೆ ಎಂದು ಉಪ್ಪಾರ ತಿಳಿಸಿದ್ದಾರೆ.
ಗ್ರಾಮದ ಬಳಿಯ ಕಬ್ಬಿನ ಗದ್ದೆಯಲ್ಲಿ ಚಿರತೆ ಕಾಣಿಸಿಕೊಂಡಿರುವ ಕಾರಣ ಎಚ್ಚರಿಕೆಯಿಂದ ಇರುವಂತೆಯೂ ಅರಣ್ಯ ಇಲಾಖೆಯ ಅಧಿಕಾರಿಗಳು ಜನರಿಗೆ ಸೂಚನೆ ನೀಡಿದ್ದಾರೆ.