ಬೆಂಗಳೂರು prajakiran.com : ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ಟ್ವಿಟರ್ ನಲ್ಲಿ ಸಿಎಂ ಟ್ವಿಟ್ ಮಾಡಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಕುರಿತು ಸಮಗ್ರವಾಗಿ ಚರ್ಚಿಸಿದ ನಂತರವೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದಿದ್ದಾರೆ.
ಇನ್ನೂ ಆರೋಗ್ಯ ಸಚಿವ ಕೆ. ಸುಧಾಕರ್ ಮತ್ತು ಶಿಕ್ಷಣ ಸಚಿವ ಸುರೇಶ್ಕುಮಾರ್ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಚಾರವಾಗಿ ಭಿನ್ನಾಭಿಪ್ರಾಯವಾಗಿದೆ.
ಕೊರೋನಾ ಸಮಯದಲ್ಲಿ ವಿದ್ಯಾರ್ಥಿಗಳ ಜೀವ ಮುಖ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ಬಗ್ಗೆ ನಮಗೆ ಮಾಹಿತಿ ಇಲ್ಲವೆಂದು ಸುಧಾಕರ್ ಹೇಳಿದ್ದರು.
ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಿರುವುದಾಗಿ ಸುರೇಶ್ಕುಮಾರ್ ಸ್ಪಷ್ಟಪಡಿಸಿದ್ದರು. ಸಿಎಂ ಮಧ್ಯ ಪ್ರವೇಶಿಸಿ ಗೊಂದಲವನ್ನು ಸರಿಪಡಿಸಿದ್ದಾರೆ.