ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗಿನ ವಿಡಿಯೋ ಸಂವಾದ ಕೈಗೊಂಡರು.
ಸಂವಾದದಲ್ಲಿ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ, ಧಾರವಾಡ ಸೇರಿದಂತೆ ವಿವಿಧ ೧೧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲೆಯ ಕೋವಿಡ್ ನಿಯಂತ್ರಣ ಕ್ರಮಗಳು, ಮಳೆ ಪ್ರಮಾಣ, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು, ನೀರಾವರಿ ಸೌಕರ್ಯ ಕುರಿತು ಮಾಹಿತಿ ನೀಡಿದರು.
ವಿಡಿಯೋ ಸಂವಾದದಲ್ಲಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಹುಬ್ಬಳ್ಳಿ ನಗರವು ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಗೆ ಕೇಂದ್ರಸ್ಥಾನವಾಗಿರುವುದರಿಂದ ನೆರೆ ಹೊರೆಯ ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಕಿಮ್ಸ್ ಗೆ ಬರುವುದು ಸಾಮಾನ್ಯ.
ಜಿಲ್ಲೆಯಲ್ಲಿ ಇದುವರೆಗೆ ೩೩ ಜನ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಶೇ.೩೦ ರಷ್ಟು ಜನ ಬೇರೆ ಜಿಲ್ಲೆಯವರೇ ಆಗಿದ್ದಾರೆ.
ಸೋಂಕು ತೀವ್ರತರವಾಗಿ ಏರಿಕೆಯಾಗುತ್ತಿರುವುದರಿಂದ ವಾಣಿಜ್ಯೋದ್ಯಮ ಸಂಸ್ಥೆ, ವ್ಯಾಪಾರಸ್ಥರ ಸಂಘಟನೆಗಳು, ಮುಂಬರುವ ೧೦ ದಿನಗಳ ಕಾಲ ಲಾಕ್ಡೌನ್ ಮಾಡುವುದು ಒಳಿತು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿವರಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟು ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ೧,೧೩೫ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ.
ಲಕ್ಷಣ ರಹಿತ ರೋಗಿಗಳಿಗೆ ೯,೦೦೦ ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಕಳೆದ ಏಪ್ರಿಲ್ನಿಂದ ಪ್ರಸಕ್ತ ಜುಲೈ ತಿಂಗಳಿನವರೆಗೆ ಮುಂಗಾರು ಮಳೆಯು ಸರಾಸರಿಗಿಂತ ಅಧಿಕವಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮತ್ತು ವಿತರಣೆ ಸಮರ್ಪಕವಾಗಿದೆ ಎಂದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಸೇರಿದಂತೆ ಕಿಮ್ಸ್, ಎಸ್ಡಿಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೃಷಿ, ನೀರಾವರಿ ಮತ್ತಿತರರ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.