ದಾವಣಗೆರೆ prajakiran.com ಅಕ್ಟೋಬರ್ ೧೬ : ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ.
ಈ ತತ್ವದ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.
ಜಿಲ್ಲಾಧಿಕಾರಿಗಳು ಮಾತ್ರವಲ್ಲ, ಇಡೀ ಸರ್ಕಾರವೇ ಗ್ರಾಮಗಳ ಕಡೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ- ಗ್ರಾಮ ವಾಸ್ತöವ್ಯ ಕಾರ್ಯಕ್ರಮ ಹಾಗೂ ವಿವಿಧ ಸೌಲಭ್ಯಗಳ ವಿತರಣೆ, ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.
ಅಭಿವೃದ್ಧಿ ಜನರ ಸುತ್ತಲೂ ಆಗಬೇಕು. ಜನರ ಬಳಿ ಅಭಿವೃದ್ಧಿ ಹೋದಾಗ ಓಡಾಟ ನಿಂತ ಸ್ಥಿರವಾದ ಬದುಕು ಸಿಗುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
*ಮನೆ ಬಾಗಿಲಿಗೆ ಪಡಿತರ*:
ಜನವರಿ 26 ರ ನಂತರ ಪಡಿತರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದ ಮುಖ್ಯಮಂತ್ರಿಗಳು, ಸಾಮಾಜಿಕ ಭದ್ರತೆ ಮನೆ ಬಾಗಿಲಿಗೆ ಬರಬೇಕು.
ಪ್ರತಿ ಗ್ರಾಮ ಪಂಚಾಯತಿಯಲ್ಲಿ ಎಲ್ಲ ಸೌಲಭ್ಯಗಳು ದೊರಕಲು ಯೋಜನೆ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ನವೆಂಬರ್ 1 ರಂದು ಜನಸೇವಕ ಕಾರ್ಯಕ್ರಮವನ್ನು ಬೆಂಗಳೂರಿನ ೨೮ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ಸೌಲಭ್ಯಗಳನ್ನು ಮೊಬೈಲ್ ಮೂಲಕ ದೊರಕಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಪಿಂಚಣಿ ಸೌಲಭ್ಯ ಆನ್ಲೈನ್ ನಲ್ಲಿ ಈಗಾಗಲೇ ಲಭ್ಯವಿದೆ. ಇದು ಲಭ್ಯವಾಗುವಲ್ಲಿ ತೊಂದರೆಯಾದರೆ, ತಾಲ್ಲೂಕು ಕಚೇರಿಗೆ ಹೋಗಬೇಕಾಗಿಲ್ಲ.
ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇರುವ ಕೇಂದ್ರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು.
ಜನರ ಸೇವೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಹಿಡಿದು, ಗ್ರಾಮ ಪಂಚಾಯತಿಯ ಅಧಿಕಾರಿಗಳು ಭಾಗವಹಿಸಬೇಕು ಎಂದರು.
ಅಧಿಕಾರ ಹೆಪ್ಪುಗಟ್ಟಿ ವಿಧಾನಸಭೆಯಲ್ಲಿ ಕುಳಿತುಕೊಳ್ಳದೆ, ಜೇನುತುಪ್ಪವಾಗಿ ಗ್ರಾಮೀಣ ಪ್ರದೇಶಕ್ಕೆ ಹರಿಯಬೇಕೆನ್ನುವ ಕಲ್ಪನೆ ನಮ್ಮದು.
ಕಾಲ ಬದಲಾಗಿದ್ದು, ಜನರು ಜಾಗೃತರಾಗಿದ್ದಾರೆ. ಸ್ಪಂದನಶೀಲ ಸರ್ಕಾರ ಕರ್ನಾಟಕದಲ್ಲಿದೆ. ಸ್ವಚ್ಚ, ದಕ್ಷ, ಜನಪರ ಆಡಳಿತವನ್ನು ನಾವು ಕೊಡುತ್ತೇವೆ. ಅದರ ಲಾಭವನ್ನು ಜನ ಪಡೆಯಬೇಕು ಎಂದು ತಿಳಿಸಿದರು.
ನಮ್ಮ ಸರ್ಕಾರ ಬಡವರಿಗೆ 4 ಲಕ್ಷ ಮನೆಗಳನ್ನು ಕೇವಲ ಒಂದೂವರೆ ವರ್ಷದಲ್ಲಿ ಕಟ್ಟಿದ್ದು, ನಗರಗಳ ಕೊಳಗೇರಿಯಲ್ಲಿರುವವರಿಗೆ 1 ಲಕ್ಷ ಮನೆಗಳನ್ನು ಕಟ್ಟಿ ಕೊಡಲಾಗುತ್ತಿದೆ.
ಜಲ್ ಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲು 2 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆಯಲ್ಲದೆ, ಅಮೃತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.
ಸಮಗ್ರ ಅಭಿವೃದ್ಧಿಯ ಕಲ್ಪನೆಯನ್ನು ಸರ್ಕಾರ ಹೊಂದಿದ್ದು, ಉದ್ಯಮ, ಉದ್ಯೋಗಕ್ಕೆ ಸಮಾನ ಮಹತ್ವವನ್ನು ನೀಡಿದೆ. ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದೇವೆ ಎಂದರು.
ದಾವಣೆಗೆರೆ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ ಎಂದ ಅವರು ನ್ಯಾಮತಿಗೆ ಮಿನಿ ವಿಧಾನಸೌಧವನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಶಾಸಕರು ಉಪಸ್ಥಿತರಿದ್ದರು.