ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿಯವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಅವರ ಬೆಂಬಲಿಗರು ಧಾರವಾಡದ ಉಪನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸುತ್ತಿದ್ದಾರೆ.
ಅವರ ವಿರುದ್ದ ಬಿಜೆಪಿ ಕುತಂತ್ರ ಮಾಡುತ್ತಿದೆ. ಕೊಲೆ ಪ್ರಕರಣದಲ್ಲಿ ಅನಗತ್ಯವಾಗಿ ಅವರನ್ನು ಎಳೆದು ತರಲಾಗುತ್ತಿದೆ.
ಇದರ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕೈವಾಡವಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗರು ಆಪಾದಿಸಿದರು.
ಅಲ್ಲದೆ, ಅವರಿಬ್ಬರ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮಾಹಿತಿ ಅರಿತು ಘಟನಾ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ ಪಾಟೀಲ, ಕೆಪಿಸಿಸಿ ಸದಸ್ಯ ಶಿವಶಂಕರ ಹಂಪಣ್ಣವರ ಸೇರಿದಂತೆ ಅನೇಕರು ಆಗಮಿಸಿ ಈ ಪ್ರಕರಣದಲ್ಲಿ ನಮ್ಮ ನಾಯಕರನ್ನು ಉದ್ದೇಶಪೂರ್ವಕವಾಗಿ ಸಿಗಿಸಲಾಗುತ್ತಿದೆ ಎಂದು ಆಪಾದಿಸಿದರು.
ಪರಿಸ್ಥಿತಿ ಬಿಗಿಗೊಳ್ಳುತ್ತಿದ್ದಂತೆ ಪೊಲೀಸ್ ಠಾಣೆಗೆ ಆಗಮಿಸಿದ ಧಾರವಾಡ ಎಸ್ಪಿ ಹಾಗೂ ಅವಳಿನಗರ ಹೆಚ್ಚುವರಿ ಡಿಸಿಪಿ ಪಿ. ಕೃಷ್ಣಕಾಂತ, ಎಸಿಪಿ ಅನುಷಾ ಜಿ, ಇನ್ಸಪೆಕ್ಟರಗಳಾದ ಪ್ರಮೋದ ಯಲಿಗಾರ, ಮಹಾಂತೇಶ ಬಸಾಪುರ, ಎಂ.ಬಿ, ನಾಯ್ಕರ, ಭರತ ರಡ್ಡಿ ಸೇರಿದಂತೆ ಅವಳಿನಗರದ ನೂರಕ್ಕೂ ಹೆಚ್ಚು ಪೊಲೀಸ್ ನಿಯೋಜನೆಗೊಳಿಸಲಾಗಿದೆ.
ಮುಂಜಾಗ್ರತ ಕ್ರಮವಾಗಿ ಎಲ್ಲಡೆ ಅಗತ್ಯ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಹರಸಾಹಸ ನಡೆಸುತ್ತಿದ್ದಾರೆ.
ಸದ್ಯ ಪೊಲೀಸ್ ಠಾಣೆ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಳ್ಳುತ್ತಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.