ಧಾರವಾಡ Prajakiran.com : ಅಗತ್ಯ ವಸ್ತುಗಳು ಹಾಗೂ ಸಿಲಿಂಡರ್ ದರ ಏರಿಕೆ ಖಂಡಿಸಿ ಧಾರವಾಡದ ವಿವಿಧ ಬಡಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ರಸ್ತೆಯಲ್ಲಿ ಅಡುಗೆ ಮಾಡಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.
ಅಲ್ಲದೆ, ಘೋಷಣೆ ಕೂಗಿ, ಮೆರವಣಿಗೆಯಲ್ಲಿ ಕಟ್ಟಿಗೆ ಹೊರೆಯನ್ನು ತಲೆಯ ಮೇಲೆ ಹೊತ್ತು ತಂದು ರಸ್ತೆಯಲ್ಲಿಯೇ ಒಲೆ ಹೊತ್ತಿಸಿ ಅಡುಗೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
ಅಚ್ಛೆ ದಿನ ಅಚ್ಛೆ ದಿನ ಎಂದು ಸುಳ್ಳು ಹೇಳಿದ ಮೋದಿಯವರೇ ಎಲ್ಲಿದೆ ನಿಮ್ಮ ಅಚ್ಛೆ ದಿನ ಕೂಡಲೇ ದಿನಬಳಕೆ ವಸ್ತುಗಳ ಬೆಲೆ ಇಳಿಸಿ ಇಲ್ಲವೆ ರಾಜಿನಾಮೆ ನೀಡಿ ಎಂದು ಹುಬ್ಬಳ್ಳಿ ಧಾರವಾಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ತೈಲ ಹಾಗೂ ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿರುವುದು ಸಾರ್ವಜನಿಕ ಜನಜೀವನದ ಮೇಲೆ ಬರೆ ಎಳೆದಂತಾಗಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಸಂಕಷ್ಟ ಅನುಭವಿಸಿದ ಜನರಿಗೆ ಬೆಲೆ ಏರಿಕೆ ಜೀವ ಹಿಂಡುತ್ತಿದೆ. ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.