ಧಾರವಾಡ Prajakiran.com : ಕೇಂದ್ರ ಸರ್ಕಾರ ರೈತ ಸಮುದಾಯದ ವಿರೋಧದ ನಡುವೆ ಕೃಷಿ ಕಾನೂನು ಜಾರಿಗೆ ತಂದಿರುವುದು ಸರಿಯಲ್ಲ.
ಕೂಡಲೇ ರೈತ ವಿರೋಧಿ ಕಾನೂನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ವತಿಯಿಂದ ಶನಿವಾರ ಧಾರವಾಡದಲ್ಲಿ ಪ್ರತಿಭಟನೆ ನಡೆಯಿತು.
ಕೃಷಿಗೆ ಮಾರಕವಾದಂತಹ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಮೂಲಕ ರೈತರ ಮರಣ ಶಾಸನ ಬರೆಯಲು ಹೊರಟಿದೆ.
ರೈತರಿಗೆ ಅನುಕೂಲ ಆಗಿರುವ ಕಾನೂನು ಹಿಂಪಡೆಯಬೇಕು ಹಾಗೂ ರೈತರ ಜೋತೆಗೆ ಚರ್ಚಿಸಿ ರೈತರ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಒತ್ತಾಯಿಸಿದರು.
ಕೂಡಲೇ ಸರ್ಕಾರ ರೈತರು ವಿರೋಧ ವ್ಯಕ್ತಪಡಿಸಿದ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು.
ಸ್ವತಃ ಪ್ರಧಾನಿ ಮೋದಿ ಅವರೇ ಈ ಕಾಯ್ದೆಗಳನ್ನು ವಾಪಸ್ ಪಡೆದಿದ್ದೇವೆ ಎಂದು ಘೋಷಣೆ ಮಾಡಬೇಕು.
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸ್ವತಃ ಮೋದಿ ಅವರೇ ಭೇಟಿ ಮಾಡಿ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದರು.
ರೈತರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯಬೇಕು.
ಅಲ್ಲದೇ ದಿನದಿಂದ ದಿನಕ್ಕೆ ಸರ್ಕಾರ ಇಂಧನದ ಬೆಲೆ ಹೆಚ್ಚಳ ಮಾಡುತ್ತಿದ್ದು, ಇದು ಬಡವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಕೂಡಲೇ ತೈಲ ಬೆಲೆಯನ್ನು ಇಳಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರವನ್ನು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಇಸ್ಮಾಯಿಲ್ ತಮಟಗಾರ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.