ಧಾರವಾಡ prajakiran.com : ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಗಣನೀಯವಾಗಿ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಧಾರವಾಡದಲ್ಲಿ ವಿಭಿನ್ನ ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ಒಂದನ್ನು ಹೆಗಲ ಮೇಲೆ ಹೊತ್ತುಕೊಂಡು ಹಾಗೂ ತಳ್ಳುಗಾಡಿಯಲ್ಲಿ ಬೈಕ್ ಒಯ್ದು ಬರುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸತತ 18 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಳ ಮಾಡಿ, ಜನ ವಿರೋಧಿ ಆಡಳಿತ ನಡೆಸುತ್ತಿವೆ ಎಂದು ಕಿಡಿಕಾರಿದರು.
ಬೆಲೆ ಹೆಚ್ಚಳ ಮಾಡುವ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರ ಹಾಗೂ ಮಧ್ಯಮ ವರ್ಗದ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ಗಳನ್ನು ಹೊತ್ತುಕೊಂಡು ಬರುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ತೈಲ ಬೆಲೆ ಇಳಿಕೆ ಮಾಡುವಂತೆ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.