ಧಾರವಾಡ Prajakiran.Com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸಾಕ್ಷಿನಾಶ ಪ್ರಕರಣವೂ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದೆ.
ಧಾರವಾಡದ ೨ನೇ ಹೆಚ್ಚುವರಿ ಜೆಎಂಎಫ್ಸಿ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರಾದ ಕುರಣಿಕಾಂತ ದಾಕು ಅವರು ಅಂತಿಮ ತೀರ್ಪು ಪ್ರಕಟಿಸಿ ಆದೇಶಿಸಿದರು.
ಈ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ವಿನಯ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನಂತರ ಈ ಮಹತ್ವದ ಆದೇಶ ಹೊರಡಿಸಿದರು.
ಈ ಹಿನ್ನೆಲೆಯಲ್ಲಿ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣ ಸೇರಿದಂತೆ ಸಾಕ್ಷಿ ನಾಶ ಪ್ರಕರಣವೂ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದಂತಾಗಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರು ಎರಡು ಪ್ರಕರಣಗಳನ್ಬು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ಮನವಿ ಪುರಸ್ಕರಿಸಿ ಈ ಆದೇಶ ಹೊರಡಿಸಿದೆ.
ಈಗಾಗಲೇ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣ ಹಾಗೂ ಐಪಿಸಿ ಸೆಕ್ಷನ್ 195 ಎ ಅಡಿಯಲ್ಲಿ ಸಿಬಿಐನಿಂದ ಸಾಕ್ಷಿನಾಶ ಕುರಿತಂತೆ ದಾಖಲಾಗಿದ್ದ ಪ್ರಕರಣವನ್ನು ಯಾವುದೇ ಕಾರಣಕ್ಕೂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬಾರದು ಎಂದು ಸಿಬಿಐ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.