ರಾಜ್ಯ

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ

ಕೋವಿಡ್ ವಿವಿಧ ತಂಡಗಳಿಂದ ಕಾರ್ಯಾಚರಣೆ* –

*ಜಿಲ್ಲಾಧಿಕಾರಿ ನಿತೇಶ್ ಪಾಟೀಲ*

ಧಾರವಾಡ prajakiran.com : ಸಾಂಕ್ರಾಮಿಕ ರೋಗವೆಂದು ಘೋಷಿಸಲ್ಪಟ್ಟಿರುವ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಡಿಯಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದ್ದು, ಧಾರವಾಡ ಜಿಲ್ಲೆಯಲ್ಲಿ ಇಂದಿನಿಂದ (ಏ.3) ಮಾರ್ಗಸೂಚಿಗಳ ಪಾಲನೆಗಾಗಿ ವಿವಿಧ ಇಲಾಖೆಗಳ ಜಂಟಿ ಕಾರ್ಯಾಚರಣೆ, ನಿಯಮ ಉಲ್ಲಂಘಿಸುವ ವ್ಯಕ್ತಿ, ಸಂಸ್ಥೆ ಹಾಗೂ ಇತರ ಅಂಗಡಿ, ಸ್ಟೋರ್‍ಗಳ ಮಾಲೀಕರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ದಂಡ ವಿಧಿಸಿ, ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಕುರಿತು ಜಿಲ್ಲಾ ಆರೋಗ್ಯ ಪಡೆ ಹಾಗೂ ವಿವಿಧ ತಂಡಗಳ ನೋಡಲ್ ಅಧಿಕಾರಿಗಳ ಮತ್ತು ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆ ಜರುಗಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆ ಮತ್ತು ತಂಡಗಳಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದು ಹೇಳಿದರು

*ಧಾರ್ಮಿಕ ಸ್ಥಳಗಳಲ್ಲಿ ಪ್ರವಚನ, ವಿಶೇಷ ಕಾರ್ಯಕ್ರಮ ಆಯೋಜನೆ ನಿಷೇಧ*: ಜಿಲ್ಲೆಯ ಧಾರ್ಮಿಕ ಕೇಂದ್ರ ಹಾಗೂ ಸ್ಥಳಗಳಲ್ಲಿ ಗುಂಪು ಸೇರಬಹುದಾದ ಪ್ರವಚನ, ವಿಶೇಷ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿ ನೀಡಲಾಗುವುದಿಲ್ಲ.

ಈ ಕುರಿತು ತಹಶೀಲ್ದಾರ್ ಹಾಗೂ ಅಪರ ಜಿಲ್ಲಾಧಿಕಾರಿ ಮೇಲುಸ್ತುವಾರಿ ವಹಿಸಿ ನಿಯಮ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರಾ ಮಹೋತ್ಸವಗಳು, ಮೇಳಗಳು ಮತ್ತು ಗುಂಪು ಸೇರುವುದರ ನಿಷೇಧವನ್ನು ಮುಂದುವರೆಸಲಾಗಿದೆ ಎಂದು ಅವರು ಹೇಳಿದರು.

ಹೊಸ ಕೊರೊನಾ ಅಲೆಯು ಅಪಾರ್ಟ್‍ಮೆಂಟ್‍ಗಳಲ್ಲಿ ಹಾಗೂ ಹೆಚ್ಚು ಜನಸಂದಣಿಯಿರುವ ಪ್ರದೇಶಗಳಲ್ಲಿ ಕಂಡು ಬರುತ್ತಿದೆ.

ಆದ್ದರಿಂದ ಸರ್ಕಾರ ಅಪಾರ್ಟ್‍ಮೆಂಟ್‍ಗಳಲ್ಲಿರುವ ಜಿಮ್, ಸ್ವಿಮ್ಮಿಂಗ್‍ಪೂಲ್, ಕ್ಲಬ್‍ಹೌಸ್, ಇಂಡೋರ್ ಸ್ಟೇಡಿಯಂ ಮುಂತಾದವುಗಳನ್ನು ಸಂಪೂರ್ಣ ಬಂದ್ ಮಾಡಲು ಆದೇಶಿಸಿದೆ.

ಈ ಕುರಿತು ಮಹಾನಗರ ಪಾಲಿಕೆ ಪರಿಶೀಲಿಸಿ ಕ್ರಮ ವಹಿಸಬೇಕೆಂದು ಅವರು ಹೇಳಿದರು.

  ಜನಸಂದಣಿ ಉಂಟಾಗುವುದರಿಂದ ಸರ್ಕಾರದ ಹೊಸ ಮಾರ್ಗಸೂಚಿಗಳಲ್ಲಿ ರ್ಯಾಲಿ, ಮುಷ್ಕರ, ಧರಣಿ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಸಂಬಂಧಿಸಿದ ಅಧಿಕಾರಿಗಳು ಅನುಮತಿಯನ್ನು ನೀಡಬಾರದೆಂದು ತಿಳಿಸಲಾಗಿದೆ.

ಪೊಲೀಸ್ ಇಲಾಖೆಯು ಏ. 20 ರವರೆಗೆ ಯಾವುದೇ ರ್ಯಾಲಿ, ಮುಷ್ಕರ, ಧರಣಿಗಳಿಗೆ ಅನುಮತಿ ನೀಡದಂತೆ ಅವರು ಸೂಚಿಸಿದರು.

ಖಾಸಗಿ ಹಾಗೂ ಸರ್ಕಾರಿ ಸಾರಿಗೆಯ ವಾಹನಗಳಲ್ಲಿ ನಿರ್ಧಿಷ್ಟಪಡಿಸಿದ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಬೇಕು ಮತ್ತು ಪರಸ್ಪರ ಅಂತರ ಕಾಪಾಡಲು ಸ್ಥಳವಕಾಶ ನೀಡಿ ಪ್ರಯಾಣಿಕರನ್ನು ಕೂರಿಸಬೇಕು.

ಸಾರಿಗೆ ಇಲಾಖೆಯ ಅಧಿಕಾರಿಗಳು ಸರ್ಕಾರಿ ಸಾರಿಗೆ ಹಾಗೂ ಬೇಂದ್ರೆ, ಟೆಂಪೋ ಟ್ರ್ಯಾಕ್ಸ್ (ಟಂಟಂ ವಾಹನ), ಆಟೋ ಹಾಗೂ ಇತರ ಖಾಸಗಿ ಪ್ರಯಾಣಿಕರ ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸಿರುವ ಹಾಗೂ ಸಾಮಾಜಿಕ ಅಂತರ ಕಾಪಾಡಿರುವ ಕುರಿತು ಪರಿಶೀಲಿಸಬೇಕು.

ನಿಯಮ ಉಲ್ಲಂಘಿಸಿದ ಸಾರಿಗೆ ವಾಹನಗಳಿಗೆ ಮೊದಲ ಸಲ ದಂಡ ವಿಧಿಸಿ, ಅದು ಮರುಕಳಿಸಿದಾಗ ವಾಹನವನ್ನು ತಾತ್ಕಾಲಿಕವಾಗಿ ಸೀಜ್ ಮಾಡಿ ಏ. 20 ರವರೆಗೆ ನೀಡದಂತೆ ಆರ್‍ಟಿಓ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶ ಮಾಡಲಾಗಿದ್ದು, ಜಿಲ್ಲೆಯ ಚಿತ್ರಮಂದಿರಗಳಲ್ಲಿ ಈ ನಿಯಮ ಪಾಲನೆ ಬಗ್ಗೆ ಪರಿಶೀಲಿಸಲು ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು.

ತಪ್ಪಿದ್ದಲ್ಲಿ ಚಿತ್ರ ಮಂದಿರವನ್ನು ಏ. 20 ರವರೆಗೆ ಬಂದ್ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

 ಧಾರವಾಡ ಜಿಲ್ಲೆಯಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೊರೆಂಟ್‍ಗಳಲ್ಲಿ ಗರಿಷ್ಟ ಗ್ರಾಹಕರ ಸಂಖ್ಯೆಯ ಶೇ.50 ರಷ್ಟು ಮೀರುವಂತಿಲ್ಲ.

ಕೋವಿಡ್ ಮುನ್ನೆಚ್ಚರಿಕೆಗಾಗಿ ಕಡ್ಡಾಯವಾಗಿ ಮಾಸ್ಕ್ ಧಾರಣೆ, ದೈಹಿಕ ಅಂತರ ಪಾಲನೆ, ಹ್ಯಾಂಡ್‍ಸ್ಯಾನಿಟೈಸರ್ ಮತ್ತು ಹ್ಯಾಂಡ್ ವಾಷ್‍ಗಳ ಬಳಕೆಗೆ ಸೂಕ್ತ ವ್ಯವಸ್ಥೆ ಮಾಡಿರಬೇಕು.

ಪ್ರತಿ ಗ್ರಾಹಕನೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಪಾಲಿಸುವುದನ್ನು ಮಾಲೀಕರು ಖಚಿತಪಡಿಸಿಕೊಳ್ಳಬೇಕು.

ಈ ನಿಯಮಗಳನ್ನು ಉಲ್ಲಂಘಿಸುವ ಪಬ್, ಬಾರ್, ಕ್ಲಬ್, ರೆಸ್ಟೊರೆಂಟ್‍ಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುವುದೆಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

 ಈ ಕುರಿತು ಪರಿಶೀಲಿಸಲು ಹಾಗೂ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡಲು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

*ನೋ ಮಾಸ್ಕ್; ನೋ ಎಂಟ್ರಿ; ನೋ ಬಿಸಿನೆಸ್* :
ಶಾಪಿಂಗ್ ಮಾಲ್‍ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್‍ಗಳು ಹಾಗೂ ಡಿಪಾರ್ಟ್‍ಮೆಂಟಲ್ ಸ್ಟೋರ್‍ಗಳಲ್ಲಿ ಶಿಷ್ಠಾಚಾರದನ್ವಯ ಕೋವಿಡ್ ಮುನ್ನೆಚ್ಚರಿಕೆಗಾಗಿ ಮಾಸ್ಕ್ ಧಾರಣೆ, ದೈಹಿಕ ಅಂತರ ಪಾಲನೆ, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರಬೇಕು.

ಉಲ್ಲಂಘಿಸಿದಲ್ಲಿ ಅವುಗಳನ್ನು ಮುಚ್ಚಲಾಗುವುದೆಂದು ಅವರು ಹೇಳಿದ್ದಾರೆ. ಮತ್ತು ಪ್ರತಿ ಅಂಗಡಿ, ಹೋಟೆಲ್, ಶಾಪಿಂಗ್ ಮಾಲ್‍ಗಳಲ್ಲಿ ಗ್ರಾಹಕರಿಗೆ ಎದ್ದು ಕಾಣುವಂತೆ ಮುಂಭಾಗದಲ್ಲಿಯೇ ನೋ ಮಾಸ್ಕ್; ನೋ ಎಂಟ್ರಿ; ನೋ ಬಿಸಿನೆಸ್ ಎಂಬ ಬೋರ್ಡ್ ಹಾಕಿರಬೇಕು.

ಮಾಸ್ಕ್ ಧರಿಸದ ಗ್ರಾಹಕರಿಗೆ ಯಾವುದೇ ರೀತಿಯ ವಸ್ತುಗಳನ್ನು ನೀಡದೇ ಮರಳಿ ಕಳುಹಿಸಬೇಕು.

ಇದರಿಂದ ಮಾಸ್ಕ್ ಅನಿವಾರ್ಯತೆ ಹಾಗೂ ಮಹತ್ವ ಉಂಟಾಗುತ್ತದೆ ಎಂದು ಅವರು ಹೇಳಿದರು.

 ಮಹಾನಗರ ಪಾಲಿಕೆ, ಕಂದಾಯ ಇಲಾಖೆ ಹಾಗೂ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಹೆಚ್ಚು ಜನಸಂದಣಿ ಇರುವ ಸಿಬಿಟಿ, ಎಪಿಎಂಸಿ ಹಾಗೂ ಇತರ ಪ್ರದೇಶಗಳಲ್ಲಿ ಕಾರ್ಯಾಚರಣೆ ಮಾಡಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಕ್ರಮ ಜರುಗಿಸಿ ದಂಡ ಹಾಕುವ ಹಾಗೂ ಕೋವಿಡ್ ಟೆಸ್ಟ್ ಮಾಡುವ ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವಷ್ಟು ಹಾಸಿಗೆ ವ್ಯವಸ್ಥೆ ಲಭ್ಯವಿದೆ.

ಈಗಾಗಲೇ ಕಿಮ್ಸ್ ಆಸ್ಪತ್ರೆಯಲ್ಲಿ 35 ಹಾಗೂ ಜಿಲ್ಲಾಸ್ಪತ್ರೆಯಲ್ಲಿ 25 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್, ಸ್ಯಾನಿಟೈಸರ್, ಪಿಪಿಕಿಟ್, ಹ್ಯಾಂಡ್‍ಗ್ಲೌಸ್ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸುರಕ್ಷತಾ ಪರಿಕರಗಳ ಲಭ್ಯತೆ ಇದೆ ಎಂದು ಅವರು ಹೇಳಿದರು.

ಸರ್ಕಾರಿ ಆಸ್ಪತ್ರೆಗಳೊಂದಿಗೆ ಅಗತ್ಯವಿದ್ದಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನೀಡಲು ಸಹಕಾರ ನೀಡುವ ಭರವಸೆ ಇದೆ ಎಂದು ಅವರು ತಿಳಿಸಿದರು.

ಮಾರ್ಗಸೂಚಿಯಲ್ಲಿ ತಿಳಿಸಿದ ನಿಯಮಗಳನ್ನು ಯಾವುದೇ ವ್ಯಕ್ತಿ, ವ್ಯಕ್ತಿಗಳ ಗುಂಪು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರನ್ವಯ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 2020 ರ 4, 5 ಮತ್ತು 10 ರಲ್ಲಿನ ವಿಭಾಗದಂತೆ ಸೂಕ್ತ ಕ್ರಮಗಳನ್ನು ಜರುಗಿಸಲಾಗುವುದು.

ಮಾರ್ಗಸೂಚಿಯಲ್ಲಿನ ನಿಯಮಗಳು ಏಪ್ರಿಲ್ 20, 2021 ರ ವರೆಗೆ ಚಾಲ್ತಿಯಲ್ಲಿರುತ್ತವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಲಾಬೂರಾಮ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ.ಮಹಾನಗರ ಪಾಲಿಕೆಯ ಆಯುಕ್ತ ಡಾ.ಸುರೇಶ್ ಇಟ್ನಾಳ ಉಪಸ್ಥಿತರಿದ್ದರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *