ಕೋವಿಡ ಹೆಚ್ಚಳದಿಂದಾಗಿ ಕಂದಾಯ ಇಲಾಖೆ ಮುನ್ನೆಚರಿಕೆ ಕ್ರಮ
ಧಾರವಾಡ prajakiran.com :
ಕಂದಾಯ ಸಚಿವರ ಸೂಚನೆ ಮೇರೆಗೆ ಬರುವ ಏಪ್ರಿಲ್ 17 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಧಾರವಾಡ ತಾಲೂಕಿನ ವನಹಳ್ಳಿ ಗ್ರಾಮ ವಾಸ್ತವ್ಯ ಹಾಗೂ ಕನಕೂರ ಗ್ರಾಮ ಪಂವಾಯತ ವ್ಯಾಪ್ತಿಯ ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ ಹಾಗೂ ವನಹಳ್ಳಿ ಗ್ರಾಮಗಳಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಪಿಂಚಣಿ,ಕಂದಾಯ ಅದಾಲತ್ ಹಾಗೂ ಪೌತಿ ಖಾತಾ ಆಂದೋಲನವನ್ನು ಮೂಂದಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಂದಾಯ ಇಲಾಖೆ ವತಿಯಿಂದ ಪ್ರತಿ ತಿಂಗಳ ಮೂರನೆ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು, ತಹಸೀಲ್ದಾರವರುಗಳು ಮತ್ತು ಇತರೆ ಅಧಿಕಾರಿಗಳು “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮ ಭೇಟಿ ಮತ್ತು ಗ್ರಾಮ ವಾಸ್ತವ್ಯ ಪ್ರಾರಂಭಿಸಲಾಗಿರುತ್ತದೆ.
ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ರಾಜ್ಯದಲ್ಲಿ ಅತಿ ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ಮಾಹೆಯ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ ಅವರು ತಿಳಿಸಿದ್ದಾರೆ.
ಏ 17ರಂದು ಯಾದಗಿರಿ ಜಿಲ್ಲೆಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸುವಿಕೆಯನ್ನು ಸ್ವತಃ ರದ್ದುಗೊಳಿಸಿರುತ್ತಾರೆ.
ಆದ್ದರಿಂದ ಏಪ್ರಿಲ್ 17ರಂದು ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಎಲ್ಲ ತಹಶಿಲ್ದಾರರ ಗ್ರಾಮ ವಾಸ್ತವ್ಯ ಹಾಗೂ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.