ಫೆ.20 ರಂದು ಕೋಗಿಲಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ವಾಸ್ತವ್ಯ
ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಇತ್ಯರ್ಥಗೊಳಿಸಲು ಆಧ್ಯತೆ
ಧಾರವಾಡ prajakiran.com : ಫೆ.20 ರಂದು ಅಳ್ನಾವರ ತಾಲೂಕಿನ ಕೋಗಿಲಗೇರಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗ್ರಾಮದ ವೀಕ್ಷಣೆ, ಸಾರ್ವಜನಿಕ ಅಹವಾಲುಗಳ ಸ್ವೀಕಾರ, ಪರಿಹಾರ, ವಿವಿಧ ಇಲಾಖೆಗಳ ಮಾಹಿತಿ ವಿನಿಮಯ, ಯೋಜನೆಗಳ ಜಾಗೃತಿ ಕುರಿತು ಉಪನ್ಯಾಸಗಳೊಂದಿಗೆ ಸರ್ಕಾರದ ನಿರ್ದೇಶನದಂತೆ ಗ್ರಾಮ ವಾಸ್ತವ್ಯ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಅವರು ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.
ಸಾರ್ವಜನಿಕರು ಬಹುಮುಖ್ಯವಾಗಿ ಕಂದಾಯ, ಭೂದಾಖಲೆಗಳ ಇಲಾಖೆ, ಪಂಚಾಯತ್ ರಾಜ್, ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಪ್ರಮುಖ ಇಲಾಖೆಗಳ ಕಾರ್ಯನಿಮಿತ್ಯ ಕಚೇರಿಗಳಿಗೆ ಆಗಮಿಸುತ್ತಾರೆ. ರಾಜ್ಯಸರ್ಕಾರವು ಸರ್ಕಾರದಿಂದ ಗ್ರಾಮೀಣ ಜನರಿಗೆ ಅದರಲ್ಲೂ ವಿಶೇಷವಾಗಿ ರೈತರಿಗೆ ಸಿಗುವ ಸೌಲಭ್ಯಗಳನ್ನು ಹಾಗೂ ಅವರ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ಗ್ರಾಮಗಳಿಗೆ ಕಡ್ಡಾಯವಾಗಿ ಭೇಟಿ ನೀಡಲು ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ರೂಪಿಸಿದೆ ಎಂದರು.
ಅದರಂತೆ, ಕೋಗಿಲಗೇರಿ ಗ್ರಾಮಕ್ಕೆ ಜಿಲ್ಲೆಯ ಅಧಿಕಾರಿಗಳ ತಂಡ ಹಾಗೂ ಅಳ್ನಾವರ ತಹಶೀಲ್ದಾರರು ಭೇಟಿ ನೀಡಿ ಜನರ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದಾರೆ. ಈ ಕುರಿತು ಅಗತ್ಯ ಕ್ರಮವಹಿಸುವಂತೆ ಮತ್ತು ಸಾಧ್ಯವಾದಷ್ಟು ಗ್ರಾಮವಾಸ್ತವ್ಯದ ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮದ ಅಂಗನವಾಡಿ, ಶಾಲೆ ಸೇರಿದಂತೆ ವಿವಿಧ ಸ್ಥಳಗಳಿಗೆ ಹಾಗೂ ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳ ಆಯ್ದ ಸ್ಥಳಗಳಿಗೆ ಖುದ್ಧು ಭೇಟಿ ನೀಡಿ ಪರಿಶೀಲಿಸುವುದಾಗಿ ಎಂದು ಅವರು ಹೇಳಿದರು.
ಪ್ರತಿ ತಾಲೂಕಿನ ತಹಶೀಲ್ದಾರರು ತಮ್ಮ ತಾಲೂಕಿನ ಹಳ್ಳಿಯೊಂದರಲ್ಲಿ ಗ್ರಾಮವಾಸ್ತವ್ಯ ಮಾಡುತ್ತಿದ್ದು, ಫೆ.20ರ ಸಂಜೆಯೊಳಗೆ ಆಯಾ ಗ್ರಾಮದ ಅಹವಾಲುಗಳು ಮತ್ತು ಪರಿಹರಿಸಿದ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಇನ್ನು ಮುಂದೆ ಪ್ರತಿ ತಿಂಗಳ 3ನೇ ಶನಿವಾರ ಜಿಲ್ಲೆಯ ಒಂದು ಗ್ರಾಮದಲ್ಲಿ ನಾನು ವಾಸ್ತವ್ಯ ಮಾಡಲಿದ್ದು, ಅದರಂತೆ ಪ್ರತಿ ತಹಶೀಲ್ದಾರರು ಆಯಾ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಈ ರೀತಿ ಪ್ರತಿ ತಿಂಗಳು ಒಟ್ಟು 8 ಗ್ರಾಮಗಳ ಬಹುತೇಕ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಕ್ರಮವಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಭಾಗಿಯಾಗಿ, ಗ್ರಾಮದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಹಾಗೂ ಇತರ ಇಲಾಖೆ ಯೋಜನೆಗಳ ಕುರಿತು ಜನರ ಅಹವಾಲುಗಳಿಗೆ ಸ್ಪಂಧಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಉಪಸ್ಥಿತರಿದ್ದರು.
.