ಧಾರವಾಡ prajakiran.com : ಕೇಂದ್ರ ಸರಕಾರ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಧಾರವಾಡದಲ್ಲಿ ಜ. 26 ರಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ತಿಳಿಸಿದರು.
ಅವರು ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಮರಗೋಳ ಎಪಿಎಂಸಿಯಿಂದ ಬೆಳಿಗ್ಗೆ 11ಕ್ಕೆ ರ್ಯಾಲಿ ಆರಂಭಗೊಂಡು ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಬಂದು ತಲುಪಲಿದೆ. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹುಬ್ಬಳ್ಳಿ- ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಘಟಕದ ವತಿಯಿಂದ ಹಮ್ಮಿಕೊಂಡಿರುವ ಈ ರ್ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ರೈತರು ಸೇರಿ ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ ಎಂದರು.
ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಸುಮಾರು 60 ದಿನಗಳಿಂದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದನೆ ನೀಡಿಲ್ಲ ಎಂದು ದೂರಿದರು.
ರೈತರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಫಲ ನೀಡಿಲ್ಲ. ಹೀಗಾಗಿ ರೈತರು ಬೃಹತ್ ಮಟ್ಟದ ರ್ಯಾಲಿ ನಡೆಸಲಿದ್ದಾರೆ.
ಈ ಹೋರಾಟ ಇನ್ನಷ್ಟು ತೀವ್ರತೆ ಪಡೆಯುವ ಮುನ್ನವೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಕಾರಿ, ರಫೀಕ ದರಗದ, ಯಾಸೀನ್ ಹಾವೇರಿಪೇಟ್, ಹಜರತ ಅಲಿ ಗೊರವನಕೊಳ್ಳ ಸುದ್ದಿಗೋಷ್ಠಿಯಲ್ಲಿದ್ದರು.