ಧಾರವಾಡ prajakiran.com : ಜಿಲ್ಲೆಯಾದ್ಯಂತ ಪ್ರಸ್ತುತ 57 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಅಂತಹ ಪ್ರದೇಶಗಳ ಎಲ್ಲ ನಿವಾಸಿಗಳ ಆರೋಗ್ಯವನ್ನು ನಿರಂತರವಾಗಿ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲ ಆಶಾ ಕಾರ್ಯಕರ್ತರಿಗೆ ಪಲ್ಸ್, ಆಕ್ಸಿಮೀಟರ್ ಪೂರೈಸಬೇಕು. ಸ್ಯಾನಿಟೈಸರ್,ಥರ್ಮಲ್ ಸ್ಕ್ಯಾನಿಂಗ್ ಮೂಲಕ ನಿವಾಸಿಗಳ ಸಾಮಾನ್ಯ ಆರೋಗ್ಯ ಮಟ್ಟವನ್ನು ದಾಖಲಿಸಿ ಅಗತ್ಯ ಇರುವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಬೇಕು ಎಂದರು.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಕೋವಿಡ್ ತಪಾಸಣೆಯನ್ನು ಹೆಚ್ಚಿಸಬೇಕು ಎಂದರು.
ಎಲ್ಲ ಸಕ್ರಿಯ ಪ್ರಕರಣಗಳ ಪ್ರಾಥಮಿಕ ಸಂಪರ್ಕ ಹೊಂದಿದವರು ಮತ್ತು ಕೊಳಚೆ ಪ್ರದೇಶದ ನಿವಾಸಿಗಳು, ಬೀದಿ ಬದಿ ವ್ಯಾಪಾರಸ್ಥರ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ಗಳಲ್ಲಿ ಕೆಲಸ ಮಾಡುವ ಜನರಲ್ಲಿ ರ್ಯಾಂಡ್ಮ್ ಆಗಿ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಂಡು ಕೋವಿಡ್ ತಪಾಸಣೆ ಮಾಡಬೇಕು.
ಗ್ರಾಮೀಣ ಭಾಗದಲ್ಲಿಯೂ ಪರೀಕ್ಷೆಗಳ ಪ್ರಮಾಣ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ,ಕಿಮ್ಸ್ ವೈದ್ಯ ಡಾ.ಲಕ್ಷ್ಮಿಕಾಂತ ಲೋಕರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ,ಜಿಲ್ಲಾ ಸಮೀಕ್ಷಣಾ ಅಧಿಕಾರಿ, ಡಾ.ಸುಜಾತಾ ಹಸವಿಮಠ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ,ಡಾ.ಶಶಿ ಪಾಟೀಲ,ಡಾ.ಶಶಿಕಲಾ ನಿಂಬಣ್ಣವರ,ಡಾ.ತನುಜಾ ಮತ್ತಿತರು ಇದ್ದರು.