ಧಾರವಾಡ prajakiran.com : ಧಾರವಾಡ-ಬೆಳಗಾವಿ ಮಧ್ಯೆ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವುದರಿಂದ ಈಗಾಗಲೇ ಸಮೀಕ್ಷೆ ಮಾಡಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೇಲ್ವೆ ಇಲಾಖೆಗೆ ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಕೈಗೊಳ್ಳಲಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಲ್ಲಿಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ರೈಲು ಮಾರ್ಗದ ನಿರ್ಮಾಣದಿಂದ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಸರಕು ಸಾಗಣೆ ಕಾರ್ಯದಲ್ಲಿ ಭಾರೀ ಪ್ರಮಾಣದ ಸಮಯ ಮತ್ತು ಇಂಧನ ಉಳಿತಾಯವಾಗಲಿದೆ.
ಹೊಸ ರೈಲು ಮಾರ್ಗ ನಿರ್ಮಾಣದಿಂದ ಅಳ್ನಾವರ ಭಾಗದ ಜನತೆ ಆತಂಕಕ್ಕೀಡಾಗುವ ಅಗತ್ಯವಿಲ್ಲ. ಆ ಮಾರ್ಗದಲ್ಲಿನ ಪ್ರಯಾಣಿಕರಿಗೆ ರೈಲ್ವೇ ಸೌಕರ್ಯಗಳು ಕುಂಠಿತವಾಗುವದಿಲ್ಲ ಎಂದರು.
ಮುಂಬಯಿ-ಬೆಂಗಳೂರು ಮಧ್ಯೆ ಬೃಹತ್ ಕೈಗಾರಿಕಾ ಕಾರಿಡಾರ್ ಸ್ಥಾಪನೆ ಕುರಿತು ಕೇಂದ್ರ ಸಚಿವ ಪಿಯೂಷ್ ಘೋಯೆಲ್ ಹಾಗೂ ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆ ಕುರಿತು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿಯಾಗಿ ಬಂದಿದ್ದೇನೆ ಎಂದರು.
ಕೈಗಾರಿಕಾ ಉತ್ಪಾದನಾ ಚಟುವಟಿಕೆಗಳಿಗೆ ಆಮ್ಲಜನಕ ಕೊರತೆಯುಂಟಾಗಿರುವುದು ತಿಳಿದು ಬಂದಿದೆ. ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗಿರುವುದರಿಂದ ಜೀವ ರಕ್ಷಣೆ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಆಮ್ಲಜನಕ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ.
ಆಮ್ಲಜನಕ ಉತ್ಪಾದನೆಯಲ್ಲಿ ಕುಂಠಿತವಾಗಿಲ್ಲ. ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ತಾತ್ಕಾಲಿಕವಾದುದು ಎಂದು ಸಚಿವರು ಹೇಳಿದರು.