ರಾಜ್ಯ

ಧಾರವಾಡದ ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ರಾಷ್ಟ್ರೀಯ ನಾಯಕರ ಭೇಟಿ….!?

ನವದೆಹಲಿ prajakiran.com : ಧಾರವಾಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ದೆಹಲಿಯಲ್ಲಿ ಹಲವು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಬಿಜೆಪಿಯ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಹಾಗೂ ಕೆಲ ಲಿಂಗಾಯತ ಮಠಾಧೀಶರು ಸಾಥ್ ನೀಡಿದ್ದರು ಎನ್ನಲಾಗಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ಮುಖಂಡರಿಗೂ ಕೊನೆ ಹಂತದವರೆಗೂ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಮೊದಲ ಹಂತದ ಮಾತುಕತೆ ನಡೆದಿದ್ದರೂ,  ಬಿಜೆಪಿ ರಾಷ್ಟ್ರೀಯ ನಾಯಕರು ಪಕ್ಷಕ್ಕೆ ಬರಮಾಡಿಕೊಳ್ಳುವ ಕುರಿತು ಸ್ಥಳೀಯ ನಾಯಕರ ಜೊತೆಗೆ ಮಾತುಕತೆ ನಡೆಸಿದ ಬಳಿಕ ಸಮ್ಮತಿ ಸೂಚಿಸುವುದಾಗಿ ಹೇಳಿದ್ದರಿಂದ ಅವರು ಬರಿಗೈಯಲ್ಲಿ ಬೆಂಗಳೂರಿಗೆ ಮರಳಿದ್ದಾರೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.

 ಮಾಜಿ ಸಚಿವ ವಿನಯಕುಲಕರ್ಣಿ ಬಿಜೆಪಿ ಸೇರ್ಪಡೆಯಾಗಲು ತರಾತುರಿಯಲ್ಲಿದ್ದು, ಧಾರವಾಡ ಜಿಲ್ಲೆಯ ಶಾಸಕರೊಬ್ಬರ ಹಾಗೂ ಸಚಿವರ ಸಮ್ಮತಿ ಮೇರೆಗೆ ದೆಹಲಿ ಯಾತ್ರೆ ಕೈಗೊಂಡಿರುವುದು ಗುಟ್ಟಾಗಿ ಉಳಿದಿಲ್ಲ.

ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಮತ್ತು ಕೇಂದ್ರದ ಇನ್ನೊಬ್ಬ ಪ್ರಬಲ ಸಚಿವ ಸದಾನಂದಗೌಡರ ಭೇಟಿಗೆ ಯತ್ನಿಸಿದರೂ ಅದು ಫಲಪ್ರದವಾಗಿಲ್ಲ ಎಂದು ಹೇಳಲಾಗುತ್ತಿದೆ.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಈ ಬಗ್ಗೆ ಈವರೆಗೆ ಮೌನ ಮುರಿದಿಲ್ಲ. ಆದರೆ ಬೆಳವಣಿಗೆ ನಡೆದಿರುವುದು ಅವರ ಗಮನಕ್ಕೆ ಇದೆ ಎಂದು ಹೇಳಲಾಗುತ್ತಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಈಗಾಗಲೇ ಎರಡು ಬಾರಿ ಸಿಬಿಐ ವಿಚಾರಣೆ ಎದುರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಿಬಿಐ ಅಧಿಕಾರಿಗಳ ತಂಡ ಈಗಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಹಲವರ ವಿರುದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪದ ಮೇಲೆ 195 ಎ ಅಡಿ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಅರ್ಜಿ ಇನ್ನೂ ವಿಚಾರಣೆ ಹಂತದಲ್ಲಿದೆ.  

ಸಿಬಿಐ ತನಿಖೆ ಅಂತಿಮ ಘಟ್ಟದಲ್ಲಿರುವಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ನಾಯಕರ ಭೇಟಿ ಮಾಡಿ ಬಂದಿರುವುದು ಹಾಗೂ ಬಿಜೆಪಿ ನಾಯಕರ ಮುಂದಿನ ಹೆಜ್ಜೆ ಕಾರ್ಯಕರ್ತರಿಗೆ ಕುತೂಹಲ ಮೂಡಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *