ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ನವಲೂರು ಬಳಿ ಬಿಆರ್ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರನ್ನು ಖುದ್ದಾಗಿ ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ.
ಬಿಆರ್ಎಟಿಎಸ್ ಸಂಸ್ಥೆಯವರು ಅವಳಿನಗರದಲ್ಲಿ ಕೈಕೊಂಡ ಬಹುತೇಕ ಎಲ್ಲ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಸಮೀಪದ ನವಲೂರ ಬಳಿ ನಿರ್ಮಿಸಿರುವ ಮೇಲು ಸೇತುವೆಯ ತಡೆಗೋಡೆಯ ಕಾಂಕ್ರೀಟ್ ಪ್ಯಾನೆಲ್ಗಳು ಕಳಚಿ ಬೀಳುತ್ತಿವೆ.
ಇದರಿಂದ ಅವಳಿ ನಗರದ ಮಧ್ಯೆ ಸಂಚರಿಸುವ ಜನರು ಆತಂಕದಲ್ಲಿದ್ದಾರೆ. ಈ ಕುರಿತು ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗಮನ ಸೆಳೆದರು.
ಈಗಾಗಲೇ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ನಡೆದ ಸಭೆಯಲ್ಲಿ ತಿಳಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ದೂರಿದರು.
ಅಲ್ಲದೆ, ಮೇಲು ಸೇತುವೆಯ ಕಳಪೆ ಕಾಮಗಾರಿಯ ಕುರಿತು ತನಿಖೆ ನಡೆಸುವ ಅಗತ್ಯವಿದೆ. ತಪ್ಪಿತಸ್ಥ ಅಧಿಕಾರಿಗಳು ಇಂಜನೀಯರಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.
ಸೇತುವೆ ದುರಸ್ತಿ ಕಾರ್ಯವನ್ನು ತ್ವರಿತವಾಗಿ ನಡೆಸಿ ಅನುಕೂಲ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಶಾಸಕಅರವಿಂದ ಬೆಲ್ಲದಅವರ ಮನವಿ ಸ್ವೀಕರಿಸಿ, ಸಕರಾತ್ಮಕವಾಗಿ ಸ್ಪಂದಿಸಿದ ಸಿಎಂ ಬಿ ಎಸ್ ವೈ ಸೂಕ್ತ ಕ್ರಮ ಕೈಗೊಂಡು ಮೂರು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ.
ಬಿಆರ್ ಟಿ ಎಸ್ ಕಳಪೆ ಕಾಮಗಾರಿ ಬಗ್ಗೆ ಪ್ರಜಾಕಿರಣ.ಕಾಮ್ ಹಾಗೂ ಹುಬ್ಬಳ್ಳಿ-ಧಾರವಾಡ ಜನತೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.