ಧಾರವಾಡ prajakiran.com : ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಗರದ ವಿವಿಧೆಡೆ ಮಾಸ್ಕ್ ಧರಿಸದವರಿಗೆ ದಂಡ, ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭವಾಗಿದೆ.
ಧಾರವಾಡದ ಸಿಬಿಟಿ, ಅಕ್ಕಿಪೇಟೆ, ಸುಭಾಷ್ ರಸ್ತೆ, ಗಾಂಧಿಚೌಕ, ವಿವೇಕಾನಂದ ವೃತ್ತ, ಮಾರುಕಟ್ಟೆ ಮತ್ತಿತರ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಸಾರ್ವಜನಿಕರನ್ನು ಗುರುತಿಸಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ನಡೆಸಿದರು.
ಅಲ್ಲದೆ, ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದರ ಮಹತ್ವ ಮನವರಿಕೆ ಮಾಡಿಕೊಟ್ಟರು. ಹಾಗೂ ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ವಾಹನ ಸವಾರರು, ಆಟೋ, ಮ್ಯಾಕ್ಸಿಕ್ಯಾಬ್ ಚಾಲಕರು, ಪ್ರಯಾಣಿಕರನ್ನು ಸಂಚಾರಿ ಸ್ವಾö್ಯಬ್ ಸಂಗ್ರಹಣಾ ಕೇಂದ್ರಕ್ಕೆ ಕರೆತಂದು ಕೋವಿಡ್ ತಪಾಸಣೆಗೆ ಒಳಪಡಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಕೋವಿಡ್ ನಿಯಂತ್ರಣ ಜಾಗೃತಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರತಿದಿನ ಸುಮಾರು ೫೦೦ ರಿಂದ ೬೦೦ ಮಾಸ್ಕ್ ಧರಿಸದ ಜನರಿಗೆ ದಂಡ ವಿಧಿಸಲಾಗುತ್ತಿದೆ.
ಇದುವರೆಗೆ ಸುಮಾರು ೩೫ ಲಕ್ಷ ರೂ.ಗಳಿಗೂ ಅಧಿಕ ದಂಡ ಸಂಗ್ರಹವಾಗಿದೆ. ಕೊರೊನಾಗೆ ಲಸಿಕೆ ಕಂಡು ಹಿಡಿಯುವವರೆಗೂ ಮಾಸ್ಕ್ ಬಳಕೆಯೇ ಲಸಿಕೆ ಎಂದು ತಿಳಿದುಕೊಳ್ಳಬೇಕು. ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸಬೇಕು ಎಂದರು.
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬ ಸಾರ್ವಜನಿಕರು ಮಾಸ್ಕ್ ಧರಿಸುವುದು, ಶಾರೀರಿಕ ಅಂತರ ಕಾಪಾಡಿಕೊಳ್ಳುವುದು, ಸಾಬೂನಿನಿಂದ ಕೈತೊಳೆಯುವುದು ಸೇರಿದಂತೆ ಮುಂತಾದ ಕೊರೊನಾ ತಡೆಗಟ್ಟುವ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸುತ್ತಿವೆ ಎಂದರು.
ಸಹಾಯಕ ಪೊಲೀಸ್ ಆಯುಕ್ತೆ ಅನುಷಾ, ತಹಶೀಲ್ದಾರ ಡಾ: ಸಂತೋಷ ಬಿರಾದಾರ, ತಾಲೂಕು ಆರೋಗ್ಯಾಧಿಕಾರಿ ಡಾ: ಅಯ್ಯನಗೌಡ ಪಾಟೀಲ, ಪಾಲಿಕೆಯ ವಲಯ ಸಹಾಯಕ ಆಯುಕ್ತ ಶ್ರೀನಿವಾಸ ಶಾಸ್ತ್ರಿ, ಆರ್.ಎಚ್. ಕುಲಕರ್ಣಿ, ಸರೋಜಾ ಪೂಜಾರ, ಮಹಾಂತೇಶ ಮ್ಯಾಗೇರಿ ಮತ್ತಿತರರು ಇದ್ದರು.