ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ೨೦೧೨ ರ ಐಎಎಸ್ ಬ್ಯಾಚಿನ ನಿತೇಶ್ ಕಲ್ಲನಗೌಡ ಪಾಟೀಲ ಅವರು ಮಂಗಳವಾರ ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಂದ ಅಧಿಕಾರ ಸ್ವೀಕರಿಸಿದರು.
ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್ಎಸ್ಎಲ್ಸಿ ವರೆಗೆ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಪಿಯುಸಿ, ಬಳಿಕ ಎನ್ಆಯ್ಟಿ ಅಲಹಾಬಾದ್ನಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದರು.
ಕೆಲಕಾಲ ಸಾಫ್ಟವೇರ್ ಇಂಜಿನೀಯರ್ ಆಗಿ ಸೇವೆ ಸಲ್ಲಿಸಿದ ಬಳಿಕ ೨೦೧೨ರಲ್ಲಿ ಯುಪಿಎಸ್ಸಿ ಯ ನಾಗರೀಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು.
ಪ್ರೊಬೇಷನರಿ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಹಶೀಲ್ದಾರರಾಗಿ ನಂತರ ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬಳಿಕ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ವಾಣಿಜ್ಯ ತೆರಿಗೆ ಇಲಾಖೆಯ ಅಪರ ಆಯುಕ್ತರಾಗಿ ಕಾರ್ಯನಿರ್ವಹಿಸಿ ಇದೀಗ ಧಾರವಾಡ ಜಿಲ್ಲಾಧಿಕಾರಿ ಹುದ್ದೆ ಸ್ವೀಕರಿಸಿದ್ದಾರೆ.
ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಸರ್ವಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.