ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್-೧೯ ತಪಾಸಣೆಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ.
ಸೋಂಕಿತರನ್ನು ತಕ್ಷಣ ನಿಗದಿತ ಆಸ್ಪತ್ರೆಗೆ ದಾಖಲಿಸಲು ಸಾಕಷ್ಟು ಪ್ರಮಾಣದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಇನ್ನು ಹೆಚ್ಚುವರಿಯಾಗಿ ಏಳು ಆ್ಯಂಬುಲೆನ್ಸ್ ಖರೀದಿಸಲು ಜಿಲ್ಲಾ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.
ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲಿಸಲು ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ ಹಾಗೂ ಎಡಿಎಲ್ಆರ್ ನೇತೃತ್ವದಲ್ಲಿ ವಿವಿಧ ಸಿಬ್ಬಂದಿಗಳ ತಂಡ ರಚಿಸಲಾಗಿದೆ.
ಸೀಲ್ಡೌನ್ ಪ್ರದೇಶದ ನಿಯಮಗಳ ಪಾಲನೆಗೆ ಪ್ರತಿ ಸೀಲ್ಡೌನ್ ಪ್ರದೇಶಕ್ಕೆ ಇನ್ಸಿಡೆಂಟ್ ಕಮಾಂಡರ್ ನೇಮಕ ಮಾಡಿ ಆದೇಶಿಸಲಾಗಿದೆ.
ಅಲ್ಲಿ ನಿಯಮಗಳ ಉಲ್ಲಂಘನೆ, ಸಾರ್ವಜನಿಕರ ಸಂಚಾರ ಕುರಿತು ದೂರುಗಳು ಬಂದಲ್ಲಿ ಇನ್ಸಿಡೆಂಟ್ ಕಮಾಂಡರ್ ಹಾಗೂ ಅಲ್ಲಿನ ಕ್ಷೇತ್ರ ಅಧಿಕಾರಿಗಳನ್ನು ಜವಾಬ್ದಾರಿಗೊಳಿಸಿ ಸೂಕ್ತ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯ ೧೫ ಖಾಸಗಿ ಆಸ್ಪತ್ರೆಗಳನ್ನು ಕೊರೊನಾ ಚಿಕಿತ್ಸೆಗಾಗಿ ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಗಳ ಶೇ.೫೦ ರಷ್ಟು ಹಾಸಿಗೆ ಹಾಗೂ ವೈದ್ಯಕೀಯ ಸೌಲಭ್ಯ ಪಡೆಯಲು ಸರ್ಕಾರ ಆದೇಶ ಮಾಡಿದೆ.
ನೋಟಿಫಿಕೇಶನ್ ಆಗಿರುವ ಆಸ್ಪತ್ರೆಗಳ ಆಡಳಿತ ಮಂಡಳಿ ಮತ್ತು ವೈದ್ಯರು ಕೆಲವು ಆಸ್ಪತ್ರೆಗಳನ್ನು ಪೂರ್ಣವಾಗಿ ಕೋವಿಡ್ ಚಿಕಿತ್ಸೆಗೆ ನೀಡಿ ಉಳಿದ ಆಸ್ಪತ್ರೆಗಳನ್ನು ನಾನ್ಕೋವಿಡ್ ರೋಗಿಗಳ ಚಿಕಿತ್ಸೆಗೆ ಮೀಸಲಿಡುವ ಕುರಿತು ಪ್ರಸ್ತಾಪಿಸಿದ್ದಾರೆ.
ಈ ಕುರಿತು ಪರಿಶೀಲಿಸಲಾಗುತ್ತಿದೆ. ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವಷ್ಟು ಖಾಸಗಿ ಆಸ್ಪತ್ರೆಗಳು ಹಾಸಿಗೆ ನೀಡಿ ಜಿಲ್ಲಾಡಳಿತಕ್ಕೆ ಸಹಕರಿಸುತ್ತಿವೆ. ಖಾಸಗಿ ಆಸ್ಪತ್ರೆಗಳಿಗೂ ಜಿಲ್ಲಾಡಳಿತ ಸಹಕಾರ ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.