ಧಾರವಾಡ prajakiran.com : ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಛಾಯಾಚಿತ್ರ ಸಹಿತ ೨೦೨೦ ರ ಮುಂಗಾರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ದಾಖಲಾತಿ ದಾಖಲಿಸುವ ವಿನೂತನ ಯೋಜನೆಗೆ ಧಾರವಾಡ ಜಿಲ್ಲಾಡಳಿತ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತಿ ಚಾಲನೆ ನೀಡಿದೆ.
ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸುವ ಮೂಲಕ ರೈತರೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ನ್ನು ಆ್ಯಂಡ್ರಾಯ್ಡ್ ಸ್ಮಾರ್ಟ್ ಮೋಬೈಲ್ಗಳಲ್ಲಿ ಬಿಡುಗಡೆ ಮಾಡಿದೆ.
ಈ ಅಪ್ಲಿಕೇಶನ್ನ್ನು ಗೂಗಲ್ ಫ್ಲೆ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ತಮ್ಮ ಅಂಗೈನಲ್ಲಿಯೇ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸಮೀಕ್ಷೆ ನಡೆಸುವವರ ವಿವರ ಲಭ್ಯವಾಗಲಿದೆ.
ಈ ಯೋಜನೆ ಅಡಿಯಲ್ಲಿ ರೈತರು, ಈ ಆ್ಯಪ್ ಮೂಲಕ ತಾವು ಬೆಳೆದಿರುವ ಬೆಳೆಗಳ ಮಾಹಿತಿಯನ್ನು ಗೂಗಲ್ ಪ್ಲೇ ಸ್ಟೋರ್ನಲ್ಲಿ ‘ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್’ (Farmers crop Survey ೨೦೨೦-೨೧) ಎಂದು ಹುಡುಕಿ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ರೈತರು ಮೊಬೈಲ್ ಸಂಖ್ಯೆ ಮತ್ತು ಓಟಿಪಿ ಸಂಖ್ಯೆಯನ್ನು ನಮೂದಿಸಿ ತಮ್ಮ ಬೆಳೆದ ಬೆಳೆಯ ವಿವರಗಳನ್ನು ನೊಂದಣಿ ಮಾಡಿಕೊಳ್ಳಬೇಕು.
ಮೊಬೈಲ್ ಆ್ಯಪ್ನಲ್ಲಿ ಮಾಸ್ಟರ್ ವಿವರಗಳನ್ನು ಮೊದಲು ಡೌನ್ಲೋಡ್ ಮಾಡಿಕೊಂಡಿರಬೇಕು, ನಂತರ ತಮ್ಮ ಜಮೀನಿನ ಸರ್ವೇ ನಂಬರಗಳನ್ನು ಅಪ್ಲಿಕೇಶನ್ಗೆ ಸೇರಿಸಿಕೊಳ್ಳಬೇಕು.
ರೈತರು ತಮ್ಮ ಜಮೀನಿನಲ್ಲಿ ಬೆಳೆದ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ, ಹೊಂಡ, ಮನೆ ಇನ್ನಿತರ ಮಾಹಿತಿಯನ್ನು ಈ ಅಪ್ಲಿಕೇಶನ್ನಲ್ಲಿ ದಾಖಲಿಸಬಹುದಾಗಿದೆ.
ತಮ್ಮ ಬೆಳೆದ ಬೆಳೆಯ ಪ್ರತಿ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ೨ ಛಾಯಾ ಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಿಕೊಳ್ಳಬೇಕು,
ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ.
ಈ ಸಂದರ್ಭದಲ್ಲಿ ರೈತರು ದಾಖಲಿಸಿದ ಬೆಳೆ ವಿವರಕ್ಕೂ, ಛಾಯಾಚಿತ್ರಕ್ಕೂ ತಾಳೆಯಾಗದ ಸಂದರ್ಭದಲ್ಲಿ ಮೇಲ್ವಿಚಾರಕರು ಅಂತಹ ಮಾಹಿತಿಯನ್ನು ತಿರಸ್ಕರಿಸಿ ಮರು ಸಮೀಕ್ಷೆಗೆ ಖಾಸಗಿ ನಿವಾಸಿಗಳಿಗೆ ಕಳುಹಿಸುತ್ತಾರೆ.
ಈ ಸಮೀಕ್ಷೆ ಕಾರ್ಯ ಆ.೨೪ರವರೆಗೆ ಅವಕಾಶ ನೀಡಲಾಗಿದೆ. ಈ ಅವಧಿ ಒಳಗಾಗಿ ಅಪ್ಲೋಡ್ ಮಾಡಲು ಕಾಲಮಿತಿ ನಿಗದಿಪಡಿಸಲಾಗಿದೆ.
ರೈತರು ನಿಗದಿತ ಸಮಯದೊಳಗೆ ಬೆಳೆಯ ಮಾಹಿತಿಯನ್ನು ಅಪ್ಲೋಡ್ ಮಾಡದಿದ್ದಲ್ಲಿ ಆ.೨೪ರ ನಂತರ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನಿನಲ್ಲಿರುವ ಬೆಳೆ ಮಾಹಿತಿ ದಾಖಲಿಸಬಹುದು.
ಬೆಳೆ ಸಮೀಕ್ಷೆ ಮಾಹಿತಿಯನ್ನು ಸಂಗ್ರಹಿಸಿದ ರೈತರಿಗೆ ಸರ್ಕಾರದ ಯೋಜನೆಗಳಿಗೆ ಬಳಸಲು ಅವಕಾಶ ಇರುತ್ತದೆ.
ಅದರಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಣೆ ಮಾಡಲು ಅವಕಾಶ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಹಾಗೂ ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತರಣಾ ಅವಧಿ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ, ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಈ ಅಪ್ಲಿಕೇಷನ್ ಉಪಯೋಗವಾಗಲಿದೆ.
ಹಿಗಾಗಿ ರೈತರು ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಂಡು ತಮ್ಮ ಬೆಳೆದ ಬೆಳೆಯ ಮಾಹಿತಿಗಳನ್ನು ಪಡೆದುಕೊಳ್ಳುವುದರೊಂದಿಗೆ ಇದನ್ನು ವಿವಿಧ ಯೋಜನೆಗಳಿಗೂ ಬಳಸಬಹುದಾಗಿದೆ.