ಧಾರವಾಡ prajakiran.com : ಧಾರವಾಡ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಬಾರದು ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಪಿ.ಎಚ್. ನೀರಲಕೇರಿ ಆಗ್ರಹಿಸಿದರು.
ಅವರು ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಇದು ಜನನೀಬಿಡ ಮಾರುಕಟ್ಟೆ ಸಮೀಪದ ಸ್ಥಳದಲ್ಲಿದ್ದು, ನೂರು ಮೀಟರ್ ಅಂತರದೊಳಗೆ ಸಾಕಷ್ಟು ಮನೆಗಳಿವೆ. ಇದರಿಂದ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲಾಡಳಿತ ಕರೋನಾ ನಿಯಂತ್ರಣ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಜಿಲ್ಲಾಉಸ್ತುವಾರಿ ಸಚಿವರು, ಜಿಲ್ಲಾಡಳಿತ ಲಾಕ್ ಡೌನ್ ಸಂದರ್ಭದಲ್ಲಿ ಪ್ರತ್ಯೇಕ ಆಸ್ಪತ್ರೆ ನಿರ್ಮಾಣ ಮಾಡಬೇಕಿತ್ತು. ಅದನ್ನು ಬಿಟ್ಟು ಈಗ ಪ್ರಕರಣಗಳು ಹೆಚ್ಚಾದ ಮೇಲೆ ಎಚ್ಚೆತ್ತುಕೊಂಡಿದೆ ಎಂದು ಕಿಡಿಕಾರಿದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿಯೇ ಕೇಂದ್ರ ಸರಕಾರದ ಮಾರ್ಗದರ್ಶಿ ಪ್ರಕಾರ ಶೇ. 50 ರಷ್ಟು ಕ್ರಮ ಕೈಗೊಂಡಿಲ್ಲ. ಇನ್ನೂ ಅದನ್ನು ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲು ಸಾಧ್ಯವೇ ಇಲ್ಲ.
ಹೀಗಾಗಿ ಜಿಲ್ಲಾಸ್ಪತ್ರೆಯನ್ನು ಸ್ಥಳೀಯ ಇತರೆ ರೋಗಿಗಳ ತಪಾಸಣೆಗೆ ಬಿಟ್ಟು ಹುಬ್ಬಳ್ಳಿಯಲ್ಲಿಯೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ 48 ವಿಭಾಗಗಳಿದ್ದು, ಕೇವಲ 44 ವೈದ್ಯರಿದ್ದಾರೆ. 22 ಸ್ಟಾಪ್ ನರ್ಸ್ ಗಳಿದ್ದು, ಪ್ರತಿನಿತ್ಯ ಸಾವಿರಾರು ಹೊರ ರೋಗಿಗಳು ಆಸ್ಪತ್ರೆಗೆ ಬಂದು ಹೋಗುತ್ತಾರೆ.
ಹೆರಿಗೆ ವಿಭಾಗ, ಮಕ್ಕಳ ವಿಭಾಗಕ್ಕೆ ಇದರಿಂದ ಸಾಕಷ್ಟು ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲಾಡಳಿತ ಬೇಕಿದ್ದರೆ ಕೈಗಾರಿಕೆ ಪ್ರದೇಶದಲ್ಲಿನ ಗೋದಾಮು, ವಿಶ್ವವಿದ್ಯಾಲಯಗಳಲ್ಲಿನ ಹಾಸ್ಟೆಲ್ ಗಳನ್ನು ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಿ ಎಂದು ಒತ್ತಾಯಿಸಿದರು.
ಒಂದು ವೇಳೆ ಜಿಲ್ಲಾಡಳಿತ ಈ ಬಗ್ಗೆ ಅಸಡ್ಡೆ ತೋರಿದರೆ ಜಿಲ್ಲೆಯ ಜನತೆ ಶಾಪ ತಟ್ಟದೆ ಇರದು. ಕಾಂಗ್ರೆಸ್ ಈ ಬಗ್ಗೆ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗಲಿದೆ ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಪಿ.ಎಚ್. ನೀರಲಕೇರಿ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಪಾಟೀಲ, ವಕೀಲರಾದ ಎಸ್. ಎ. ಪವಾರ ಉಪಸ್ಥಿತರಿದ್ದರು.