ಧಾರವಾಡ : ಧಾರವಾಡ ತಾಲೂಕಿನ ಹಳ್ಳಿ ಹಳ್ಳಿಗಳಿಗೂ ಗಾಂಜಾ ಘಾಟು ಆವರಿಸಿಕೊಂಡಿದೆ.
ಈ ನಿಟ್ಟಿನಲ್ಲಿ ಪೊಲೀಸರ ಕಾರ್ಯಾಚರಣೆ ಚುರುಕುಗೊಂಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋಬ್ಬನನ್ನು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗ್ರಾಮೀಣ ಠಾಣೆಯ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.
ಗ್ರಾಮದ ಚನ್ನಮಲ್ಲಪ್ಪ ಬಾಳಪ್ಪ ಕೊಮಾರದೇಸಾಯಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಅಂದಾಜು ೮ ಸಾವಿರ ರೂಪಾಯಿ ಮೌಲ್ಯದ ೫೦೦ ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ.
ಆರೋಪಿ ಚನ್ನಮಲ್ಲಪ್ಪ ಕೊಮಾರದೇಸಾಯಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭದಲ್ಲಿ ನರೇಂದ್ರ ಕ್ರಾಸ್ ಬಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಪಿಎಸ್ಐ ಮಹೇಂದ್ರಕುಮಾರ ನಾಯಕ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.