ಧಾರವಾಡ prajakiran.com : ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶಗೌಡಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅ.೨೨ರಂದು ಗುರುವಾರಕ್ಕೆ ಮುಂದೂಡಲಾಯಿತು.
ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಈ ಹಿಂದೆ ಅ.15ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಪ್ರಕರಣ ಕುರಿತಂತೆ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ಇಂದು ಅ.೨೦ಕ್ಕೆ ಮುಂದೂಡಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲವು ಹೆಚ್ಚಿನ ವಿಚಾರಣೆಗೆ ಅ. ೨೨ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.
ಈ ಕುರಿತಂತೆ ಸಿಬಿಐ ಅಧಿಕಾರಿಗಳಿಗೆ ನ್ಯಾಯಾಲಯ ನಿಲುವು ತಿಳಿಸುವಂತೆ ನೋಟಿಸ್ ಜಾರಿ ಮಾಡಿದ್ದರಿಂದ ಅವರು ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಹಲವು ಗಂಭೀರ ಆರೋಪಗಳಿಗೆ ಗುರಿಯಾಗಿರುವ ಹುಬ್ಬಳ್ಳಿ-ಧಾರವಾಡನ ಹಲವು ಪೊಲೀಸ್ ಅಧಿಕಾರಿಗಳಿಗೆ ಬಂಧನ ಭೀತಿ ಎದುರಾಗುವ ಸಾಧ್ಯತೆಗಳಿವೆ ಎನ್ನುವ ಮಾಧ್ಯಮ ವರದಿಗಳ ಹಿನ್ನಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯತ್ತ ಹಿರಿಯ ಪೊಲೀಸ್ ಅಧಿಕಾರಿ ವರ್ಗದವರ ಚಿತ್ತ ನೆಟ್ಟಿದೆ.