ಧಾರವಾಡ prajakiran.com : ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅ.16ರಂದು ಶುಕ್ರವಾರ (ಇಂದು) ನಡೆಯಲಿದೆ.
ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿನ್ನೇ ಅ.15ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಪ್ರಕರಣ ಕುರಿತಂತೆ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ಇಂದು ಅ.16ಕ್ಕೆ ಮುಂದೂಡಿದರು.
ಈ ಹಿಂದೆ ಈ ಕುರಿತಂತೆ ಸಿಬಿಐ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ತಮ್ಮ ನಿಲುವು ತಿಳಿಸುವಂತೆ ಸೂಚಿಸಿದ್ದರು.
ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಹಲವು ಗಂಭೀರ ಆರೋಪಗಳಿಗೆ ಗುರಿಯಾಗಿರುವ ಹುಬ್ಬಳ್ಳಿ-ಧಾರವಾಡನ ಹಲವು ಪೊಲೀಸ್ ಅಧಿಕಾರಿಗಳಿಗೆ ಬಂಧನ ಭೀತಿ ಎದುರಾಗುವ ಸಾಧ್ಯತೆಗಳಿವೆ ಎನ್ನುವ ಮಾಧ್ಯಮ ವರದಿಗಳ ಹಿನ್ನಲೆಯಲ್ಲಿ ಚೆನ್ನಕೇಶವ ಟಿಂಗರಿಕರ್ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ.