ಧಾರವಾಡ prajakiran.com : ಕೋವಿಡ್-೧೯ ಕರೊನಾ ವೈರಾಣು ಹರಡದಂತೆ ಸೀಲ್ಡೌನ್ ಮಾಡಿರುವ ಪ್ರದೇಶಗಳಿಂದ ಅನುಮತಿ ಪಡೆಯದೆ ಮತ್ತು ಅನಗತ್ಯವಾಗಿ ಹೊರ ಬರುವವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯ ಪಡೆಯ ಸಭೆ ಜರುಗಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಸೀಲ್ಡೌನ್ ಪ್ರದೇಶಗಳಲ್ಲಿ ಸೀಲ್ಡೌನ್ ನಿಯಮಗಳ ಪಾಲನೆ ಕಟ್ಟುನಿಟ್ಟಾಗಿ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅದರಲ್ಲೂ ವಿಶೇಷವಾಗಿ ಮೊರಬ ಗ್ರಾಮದಲ್ಲಿ ಸೀಲ್ಡೌನ್ ನಿಯಮಗಳನ್ನು ಬಿಗಿಗೊಳಿಸಿ, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮೂರು ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಎಂದು ಸೂಚಿಸಿದರು.
ಪೊಲೀಸ್, ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ದಿನದ ೨೪ ಗಂಟೆ ಸ್ಥಳದಲ್ಲಿದ್ದು, ಕಾವಲು ಕಾಯಬೇಕು ಎಂದರು.
ಸೀಲ್ಡೌನ್ ಪ್ರದೇಶದಲ್ಲಿ ಮನೆ ಮನೆಗೆ ಹೋಗಿ ಆರೋಗ್ಯ ಕಾರ್ಯಕರ್ತರು ಸಮೀಕ್ಷೆ ಮಾಡಿ ಮಾಹಿತಿ ಸಂಗ್ರಹಿಸಿಬೇಕು.
ಮಾಹಿತಿ ನೀಡದೆ, ಅಸಹಕಾರ ನೀಡುವ, ದುರ್ವತನೆ ತೋರುವವರ ವಿರುದ್ಧ ಪೊಲೀಸ್ ಅಧಿಕಾರಗಳು ಪ್ರಕರಣ ದಾಖಲಿಸಿಕೊಳ್ಳುವಂತೆ ಸೂಚಿಸಿದರು.
ಕಂಟೆನ್ಮೆಂಟ್ ಪ್ರದೇಶದಲ್ಲಿನ ಜನರ ಮನೆ ಬಾಗಿಲಿಗೆ ತರಕಾರಿ, ಪಡಿತರ, ಆರೋಗ್ಯ ಸೇವೆಗಳು ತಲುಪುವಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಆದರೂ ಕೆಲವರು ಅನಗತ್ಯವಾಗಿ ಹೊರಗೆ ಸಂಚರಿಸುತ್ತಿದ್ದಾರೆ.
ಮುಖಗವಸು (ಮಾಸ್ಕ್)ಧಾರಣೆ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ.
ಆದ್ದರಿಂದ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೀಲ್ಡೌನ್, ಕಂಟೆನ್ಮೆಂಟ್ ಪ್ರದೇಶಗಳಲ್ಲಿ ಇಂದಿನಿಂದ ವಿಶೇಷ ಕಾರ್ಯಚರಣೆ (ಡ್ರೈವ್) ಮಾಡಿ, ನಿಯಮಗಳನ್ನು ಪಾಲಿಸದವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲು ಮಾಡಬೇಕು.
ತಪ್ಪು ಮರುಕಳಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಎಪಿಎಂಸಿ, ಬಸ್ನಿಲ್ದಾಣ ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಮತ್ತು ಮಾಸ್ಕ್ ಧರಿಸದೆ ಸಂಚರಿಸುವವರ ವಿರುದ್ಧ ಕಾರ್ಯಾಚರಣೆ ಮಾಡಿ, ದಂಡ ವಿಧಿಸಿ, ಎಚ್ಚರಿಕೆ ನೀಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಾಗೂ ತಹಸಿಲ್ದಾರರಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಸೀಲ್ಡೌನ್ ಪ್ರದೇಶದಲ್ಲಿ ಕಂಪ್ಲಿಟ್ ಸೀಲ್ಡೌನ್ ಪಾಲನೆ ಆಗದಿದ್ದರೇ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ, ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಡಿವೈಎಸ್ಪಿ ರಾಮನಗೌಡ ಹಟ್ಟಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಮಹಾನಗರ ಪಾಲಿಕೆ ಜಂಟಿ ಆಯುಕ್ತ ಅಜೀಜ್ ದೇಸಾಯಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ತಹಸೀಲ್ದಾರ ನವೀನ ಹುಲ್ಲೂರ, ಆರ್.ಸಿ.ಹೆಚ್.ಓ ಡಾ.ಎಸ್.ಎಂ ಹೊನಕೇರಿ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಶಶಿ ಪಾಟೀಲ, ಡಾ.ಕೆ.ಎನ್. ತನುಜಾ, ಡಾ.ಎಸ್.ಬಿ. ನಿಂಬಣ್ಣವರ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.