ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ ೮ ಕೊನೆಯ ದಿನ
ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಬುಧವಾರ ಅ.೭ರಂದು ಏಳು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಟ್ಟು ಒಂಬತ್ತು ಅಭ್ಯರ್ಥಿಗಳಿಂದ ಒಟ್ಟು ಹತ್ತು ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಎಂ. ಕುಬೇರಪ್ಪ ದ್ವಿಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಸ್.ವ್ಹಿ. ಸಂಕನೂರ, ಜೆಡಿಎಸ್ ಅಭ್ಯರ್ಥಿಯಾಗಿ ಶಿವಶಂಕರ ಕಲ್ಲೂರ, ಆಜಾದ್ ಮಜ್ದೂರ್ ಕಿಸಾನ್ ಪಾರ್ಟಿ ಅಭ್ಯರ್ಥಿಯಾಗಿ ಪ್ರಕಾಶ ಕಾಂಬಳೆ ನಾಮಪತ್ರ ಸಲ್ಲಿಸಿದ್ದಾರೆ.
ಸ್ವತಂತ್ರ ಅಭ್ಯರ್ಥಿಗಳಾಗಿ ಶಿವಕುಮಾರ್ ತಳವಾರ, ಬಸವರಾಜ ತೇರದಾಳ, ಚರಣರಾಜ್ ಕೆ.ಎ. ನಾಮಪತ್ರ ಸಲ್ಲಿಸಿದ್ದಾರೆ.
ಅಭ್ಯರ್ಥಿಗಳ ನಾಮಪತ್ರಗಳನ್ನು ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ಸ್ವೀಕರಿಸಿದರು.
ನಾಮಪತ್ರ ಸಲ್ಲಿಸಲು ಅಕ್ಟೋಬರ್ ೮ ಗುರುವಾರ ಕೊನೆಯ ದಿನವಾಗಿದೆ. ಅಕ್ಟೋಬರ್ ೯ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. ೧೨ ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.