ಧಾರವಾಡ prajakiran.com : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಕೇಶವ ಟಿಂಗರೀಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ವಿಚಾರಣೆ ಮಾಡಿದ ಧಾರವಾಡದ ೪ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ, ಸಿಬಿಐಗೆ ತಕರಾರು ಸಲ್ಲಿಸಲು ಅವಕಾಶ ನೀಡಿದೆ.
ಯೋಗೀಶಗೌಡ ಗೌಡರ ಹತ್ಯೆ ನಡೆದ ಸಂದರ್ಭದಲ್ಲಿ ಉಪನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಮತ್ತು ಕೆಲ ಕಾಲ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಕೇಶವ ಟಿಂಗರೀಕರ್ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಸಿಬಿಐ ತಮ್ಮನ್ನು ಬಂಧಿಸುವ ಸಾಧ್ಯತೆಗಳಿದ್ದು, ನಿರೀಕ್ಷಣಾ ಜಾಮೀನು ನೀಡಬೇಕು ಎಂದು ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಕೋರಿದ್ದಾರೆ.
ಅದರಂತೆ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದಂತೆ ತಕರಾರು ಸಲ್ಲಿಸಲು ಸಿಬಿಐ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಅ. ೧೫ಕ್ಕೆ ಮುಂದೂಡಿದೆ.