ಧಾರವಾಡ prajakiran.com : ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧನಕ್ಕೆ ಒಳಗಾಗಿ ಸದ್ಯ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಧಾರವಾಡ ಮನೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ ತೂಗುದೀಪ ಭೇಟಿ ನೀಡಿದರು.
ಭಾನುವಾರ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ರಾಬರ್ಟ್ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು ಬಂದಿದ್ದು ವಿಶೇಷವಾಗಿತ್ತು.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜೊತೆಗೆ ಕಳೆದ ಹಲವು ವರ್ಷಗಳಿಂದ ಆಪ್ತ ಒಡನಾಟ ಹೊಂದಿರವ ನಟ ದರ್ಶನ ನಾಲ್ಕು ತಿಂಗಳ ಹಿಂದೆಷ್ಟೇ ವಿನಯ ಡೇರಿಗೆ ಭೇಟಿ ನೀಡಿ ಕೆಲ ಕಾಲ ಕಳೆದಿದ್ದರು.
ಹೀಗಾಗಿ ಅವರ ಮನೆಗೆ ಭೇಟಿ ನೀಡಿ ಪತ್ನಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳಿಗೆ ಧೈರ್ಯ ತುಂಬಿದರು.
ನಿಮ್ಮೊಂದಿಗೆ ನಾನಿದ್ದೇನೆ. ಯಾವುದೇ ಕಾರಣಕ್ಕೂ ಎದೆಗುಂದಬೇಡಿ ಎಂದು ಹೇಳಿದರು.
ಬೆಳಗ್ಗೆ 10.30ಕ್ಕೆ ಬರಬೇಕಿದ್ದ ನಟ ದರ್ಶನ ಮಧ್ಯರಾತ್ರಿಯ ವೇಳೆಗೆ ಆಗಮಿಸಿ, ಅಚ್ಚರಿ ಮೂಡಿಸಿದರು.
ಅವರಿಗಾಗಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮಾಧ್ಯಮದವರು ಬೆಳಗ್ಗೆ ಯಿಂದ ಸಂಜೆಯವರೆಗೆ ಕಾದು ಕಾದು ಸುಸ್ತಾಗಿ, ಹಿಡಿಶಾಪ ಹಾಕುತ್ತಾ ಬಂದ ದಾರಿಗೆ ಸುಂಕವಿಲ್ಲ ಎಂದು ಹಿಂದಕ್ಕೆ ಮರಳಿದರು.
ಮುಂಜಾಗ್ರತಾ ಕ್ರಮವಾಗಿ ವಿನಯ ಮನೆಯ ಸುತ್ತಲೂ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.