ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಸೋಮವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.
ಬೆಂಗಳೂರಿನ ವರದರಾಜ ನಗರದ ನಿವಾಸಿಯಾಗಿರುವ ರವಿ ಶಿವಪ್ಪ ಪಡಸಲಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.
ಪಕ್ಷೇತರ ಅಭ್ಯರ್ಥಿಗಳಾಗಿ ಬಸವರಾಜ ಗುರಿಕಾರ, ಬಿ.ಡಿ. ಹಿರೇಗೌಡರ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಬಿಜೆಪಿಯಿಂದ ಎಸ್.ವಿ. ಸಂಕನೂರ, ಕಾಂಗ್ರೆಸ್ ನಿಂದ ಎಂ.ಆರ್. ಕುಬೇರಪ್ಪ ಅಭ್ಯರ್ಥಿಗಳಾಗಿದ್ದು, ಚುನಾವಣೆ ರಂಗೇರುವಂತೆ ಮಾಡಿದೆ.
ನಾಮಪತ್ರ ಸಲ್ಲಿಸಲು ಅಕ್ಟೋಬರ್ ೮ ಕೊನೆಯ ದಿನವಾಗಿದ್ದು, ಅಕ್ಟೋಬರ್ ೯ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. ೧೨ ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.