ಧಾರವಾಡ ಪ್ರಜಾಕಿರಣ.ಕಾಮ್ : ನಕಲಿ ದಾಖಲೆಗಳನ್ನು ಸೃಷ್ಟಿಸಿ ಶ್ರೀ ಶಿವಲಿಂಗೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಸರ್ಕಾರದಿಂದ ಅನುದಾನ ಪಡೆಯುತ್ತಿದೆ ಎಂದು ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ, ಮಂಟೂರು, ನಾಗರಳ್ಳಿ ಗ್ರಾಮಸ್ಥರು ಧಾರವಾಡ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶ್ರೀ ಅಡವಿ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುವ ಶ್ರೀ ಶಿವಲಿಂಗೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಪ್ರೌಢಶಾಲೆಯಲ್ಲಿ ಶಿಕ್ಷಕರ ನೇಮಕಾತಿ ಹಾಗೂ ಶಿಕ್ಷಕರ ವೇತನ ಬಿಡುಗಡೆ ವಿಚಾರದಲ್ಲಿ ಅವ್ಯವಹಾರ ನಡೆದಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕಾರಿಗಳು ಅವ್ಯವಹಾರ ನಡೆಸಿದ್ದು, ಈ ಕುರಿತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶ್ರೀ ಶಿವಲಿಂಗೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಶಿಕ್ಷಕರ ನೇಮಕಾತಿಯಲ್ಲಿ ಇಲಾಖೆಯ ಎಲ್ಲನಿಯಮಗಳನ್ನು ಉಲ್ಲಂಘಿಸಿದೆ.
ಇಪ್ಪತ್ತು ವರ್ಷಗಳಿಗೂ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಪರಿಗಣಿಸದೇ ಬೇರೆಯವರನ್ನು ನೇಮಕ ಮಾಡಿಕೊಳ್ಳಲಾಗಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ.
ಈ ಕುರಿತು ಇಲಾಖೆಯ ಅಧಿಕಾರಿಗಳು ಕೈಕೊಂಡ ತನಿಖೆಯಲ್ಲಿ ಲೋಪ ಎಸಗಿರುವುದು ಕಂಡು ಬಂದಿದೆ.
ಆದಾಗ್ಯೂ ಇದುವರೆಗೂ ಪ್ರಾಮಾಣಿಕವಾಗಿ ಶ್ರಮಿಸಿದವರಿಗೆ ನ್ಯಾಯ ಸಿಗುತ್ತಿಲ್ಲ. ಇಂತಹ ಧೋರಣೆಯಿಂದ ಶಿಕ್ಷಕರು ಬೀದಿಗೆ ಬೀಳುವ ಪರಿಸ್ಥಿತಿ ಉದ್ಭವವಾಗಿದೆ.
ಅಲ್ಲದೇ ಶಾಲೆಯ ಆಡಳಿತ ಮಂಡಳಿಯ ಹಾಲಿ ಅಧ್ಯಕ್ಷರಾಗಿರುವ ಶ್ರೀ ಶಿವಲಿಂಗ ಸ್ವಾಮಿಗಳು , ಆಡಳಿತ ಮಂಡಳಿಯ 11 ಸದಸ್ಯರನ್ನು ಅಕ್ರಮವಾಗಿ ಬದಲಾಯಿಸಿ, ತಮಗೆ ಬೇಕಾದವರನ್ನು ನೇಮಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಲೇ ತನಿಖೆ ನಡೆಸಿ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು. ಆಡಳಿತ ಮಂಡಳಿಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಆಡಳಿತ ಮಂಡಳಿಯ ಮಾಜಿ ಸದಸ್ಯ ವಿರೂಪಾಕ್ಷ ಗೌಡ ಭರಮಗೌಡ್ರ, ಶಿಕ್ಷಕರಾದ ಎಫ್.ಎಸ್. ಅಮಾತಿಗೌಡರ, ಬಿ.ಆರ್.ಅರಳಿ, ಎಸ್.ಪಿ ಹಿರೇಹಾಳ, ಎಂ.ಎಸ್.ಗಾಜಿ ಸೇರಿದಂತೆ ಹಲವರು ಭಾಗವಹಿಸಿದ್ದರು.