ಗದಗ prajakiran.com : ವಿಶೇಷ ಚೇತನ ಮಗುವೀಗೂ ಕರೋನಾ ಸೋಂಕು ಕಾಣಿಸಿಕೊಂಡ ಪರಿಣಾಮ 19 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಲಕ್ಷ್ಮೇಶ್ವರ ಪಟ್ಟಣದ ಕಿವುಡ ಮತ್ತು ಮೂಕ ಮಕ್ಕಳ ಖಾಸಗಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗೆ ಸೋಂಕು ವಕ್ಕರಿಸಿದ್ದರಿಂದ ಆತನ ಸಂಪರ್ಕದಲ್ಲಿದ್ದ 19 ವಿದ್ಯಾರ್ಥಿಗಳು ಸಂಕಷ್ಟಅನುಭವಿಸಿದರು.
ವಿಶೇಷ ಶಾಲೆಯ ಮಕ್ಕಳ ಪರೀಕ್ಷೆ ಶನಿವಾರದಿಂದ ಪ್ರಾರಂಭವಾಗಿದೆ. ಜೂನ್ 24ರಂದು ವಿಜಯಪುರ ಮೂಲದ ವಿದ್ಯಾರ್ಥಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಹೀಗಾಗಿ ಈ ಶಾಲೆಯ ಇತರ 19 ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಿದಾಗ ಎಲ್ಲರ ವರದಿ ನೆಗೆಟಿವ್ ಬಂದಿದೆ.
ಈ ಹಿನ್ನಲೆಯಲ್ಲಿ ಇವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಅವಕಾಶ ಕಲ್ಪಿಸಲಾಗುವುದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದ್ದರು.
ಆದರೆ ಸೋಂಕು ಪತ್ತೆಯಾದ ಹಾಗೂ ಕ್ವಾರಂಟಿನ್ ನಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸೂತ್ತೋಲೆಯಲ್ಲಿ ತಿಳಿಸಲಾಗಿದೆ.
ಇಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಅವರಿಗೆ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು ಎಂದು ಅಭಯ ನೀಡಿದ್ದರಿಂದ ಕೈ ಬಿಡಲಾಯಿತು.
ಮುಂದಿನ ಶೈಕ್ಷಣಿಕ ವರ್ಷದ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಹೀಗಾಗಿ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ.