ಧಾರವಾಡ prajakiran.com : ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನ ನಿತ್ಯ ಸ್ಯಾನಿಟೈಸೇಶನ್, ದರ್ಶನಕ್ಕೆ ಬರುವ ಭಕ್ತರು, ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ದರ್ಶನ ಸರದಿಯಲ್ಲಿ ಸಾರ್ವಜನಿಕ ಭಕ್ತಾದಿಗಳು ಕನಿಷ್ಟ ೬ ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಕೋವಿಡ್-೧೯ ಸಾಂಕ್ರಾಮಿಕ ಸೋಂಕು ಹರಡುವಿಕೆ ತಡೆಯಲು ರಾಷ್ಟ್ರೀಯ ನಿರ್ದೇಶನಗಳನ್ನು, ರಾಜ್ಯ ಸರ್ಕಾರ ಹೊರಡಿಸುವ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಆರೋಗ್ಯ, ಪೊಲೀಸ್, ಮಹಾನಗರ ಪಾಲಿಕೆ, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿ ಮೊದಲಾದ ಇಲಾಖೆಗಳು ನೀಡುವ ಸೂಚನೆಗಳನ್ನು ಅನುಷ್ಠಾನಗೊಳಿಸಬೇಕು.
ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವವನ್ನು ಸೌಹಾರ್ದ ರೀತಿಯಿಂದ ಆಚರಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಎಚ್ಚರ ವಹಿಸಬೇಕು.
ರಾಷ್ಟ್ರೀಯ ನಿರ್ದೇಶನಗಳನ್ನು ರಾಜ್ಯ ಸರಕಾರ, ಹಾಗೂ ಜಿಲ್ಲಾಡಳಿತ ಹೊರಡಿಸುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ ೧೮೮ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.