ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ 16ನೇ ದಿನದ ಸರದಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಫೆ. 14ರಂದು ಮಂಗಳವಾರ ಮಧ್ಯಾಹ್ನ 12ಕ್ಕೆ ಹೆಚ್. ಡಿ. ಕುಮಾರಸ್ವಾಮಿ ಭೇಟಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ದ ವಿವಾದಾತ್ಮಕ ಹೇಳಿಕೆ ಬಳಿಕ ಅವರ ತವರು ನೆಲದ ಹೋರಾಟಕ್ಕೆ ಸಾಥ್ ನೀಡಿದ ಮಾಜಿ ಸಿಎಂ
ಹೋರಾಟಗಾರರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಶಕ್ತಿ ತುಂಬಿದ ಹೆಚ್ಡಿಕೆ
ಧಾರವಾಡ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 358 ನೀರು ಸರಬರಾಜು ನೌಕರರ ಮರು ಸೇರ್ಪಡೆ ಹಾಗೂ ಎಂಟು ತಿಂಗಳ ಸಂಬಳ ಬಿಡುಗಡೆಗೆ ಒತ್ತಾಯಿಸಿ ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ನೇತೃತ್ವದಲ್ಲಿ
ಕಳೆದ 15 ದಿನಗಳಿಂದ ನೂರಾರು ನೌಕರರ ಸರದಿ ಉಪವಾಸ ಸತ್ಯಾಗ್ರಹ 15ನೇ ದಿನವೂ ಮುಂದುವರೆಸಿದ್ದಾರೆ.
ಈವರೆಗೂ ರಾಜ್ಯ ಸರ್ಕಾರ, ಮಹಾನಗರ ಪಾಲಿಕೆ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಅಸಹಕಾರ ಚಳವಳಿ ನಡೆಸುತ್ತಿರುವ
ಹೋರಾಟದ ಸ್ಥಳಕ್ಕೆ ಫೆ. 14ರಂದು ಮಂಗಳವಾರ ಮಧ್ಯಾಹ್ನ 12ಕ್ಕೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ ಎಂದು
ಮಹಾನಗರ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಗುರುರಾಜ ಹುಣಸಿಮರದ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ 358 ನೌಕರರು ಕಳೆದ 15 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಮಾಡುತ್ತಿದ್ದರೂ ಈವರೆಗೂ ಯಾರೊಬ್ಬರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.
ಮಹಾನಗರ ಪಾಲಿಕೆ ಆಯುಕ್ತರು 358 ನೌಕರರಿಗೆ ಎಳು ತಿಂಗಳ ಕಾಲ ದುಡಿಸಿಕೊಂಡು ಸಂಬಳವೂ ನೀಡದೆ, ರಾಜ್ಯ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ, ಮೌಖಿಕವಾಗಿ ಕೆಲಸದಿಂದ ವಜಾಗೊಳಿಸಿರುವುದು ಕಾನೂನು ಬಾಹಿರವಾಗಿದೆ.
ಈ ಹಿನ್ನೆಲೆಯಲ್ಲಿ ಅವಳಿನಗರದ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ವಿವಿಧ ಭಾಗದ ಜನತೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುವ ಮೂಲಕ ಸರ್ಕಾರದ ವಿರುದ್ಧ ಚಾಟಿ ಬೀಸಬೇಕು ಎಂದು ಗುರುರಾಜ ಹುಣಸಿಮರದ ಮನವಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಅವರ ತವರು ನೆಲದ ಬೃಹತ್ ಹೋರಾಟಕ್ಕೆ ಸಾಥ್ ನೀಡುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.