ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆ ವೇಳೆ 15ನೇ ಆರೋಪಿಯಾಗಿರುವ
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಹೈಕೋರ್ಟ್ ಕೂಡ ಅರ್ಜಿ ವಜಾಗೊಳಿಸಿದೆ.
ಧಾರವಾಡ ವಿಧಾನಸಭಾ ಕ್ಷೇತ್ರ-71ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡಲೇಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೆ. ನಟರಾಜನ್ ಅವರು ವಾದ ಪ್ರತಿವಾದ ಆಲಿಸಿದ ಬಳಿಕ ಈ ಮಹತ್ವದ ಆದೇಶ ಹೊರಡಿಸಿದರು.
ವಿನಯ ಕುಲಕರ್ಣಿ ಅವರ ಪರ ಹಿರಿಯ ವಕೀಲರಾದ ಸಿ.ಎಚ್ ಜಾಧವ್ ಅವರು ಪ್ರಬಲವಾದ ವಾದ ಮಂಡಿಸಿ, ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಕೆಲದಿನಗಳ ಮಟ್ಟಿಗಾದರೂ ಅವಕಾಶ ನೀಡಲೇಬೇಕು ಎಂದು ಗಮನ ಸೆಳೆದರು.
ಸಿಬಿಐ ಪರ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿ, 90ಕ್ಕೂ ಹೆಚ್ಚು ಸಾಕ್ಷ್ಯಿಗಳು ಧಾರವಾಡದಲ್ಲಿರುವುದರಿಂದ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನಿರಾಕರಿಸಿ ಮಹತ್ವದ ಆದೇಶ ಹೊರಡಿಸಿದರು.
ಇದರಿಂದಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಮತ್ತೆ ಹಿನ್ನಡೆ ಆದಂತಾಗಿದೆ.