ಹುಬ್ಬಳ್ಳಿ prajakiran.com: ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ರಸ್ತೆಗಳನ್ನು ಕೇಂದ್ರ ರಸ್ತೆ ನಿಧಿ(ಸಿ.ಆರ್.ಎಫ್) ಅಡಿ ನಿರ್ಮಾಣ ಮಾಡಲಾಗುತ್ತಿದೆ.
ಉಳಿದ ರಸ್ತೆಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿಗಳನ್ನು ನೀಡುವಂತೆ ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳು ಪ್ರಸ್ತಾವನೆಗೆ ಒಪಿಗ್ಪೆ ನೀಡಿದ್ದು, ಶೀಘ್ರವಾಗಿ ಸಾವಿರ ಕೋಟಿ ರುಪಾಯಿಗಳನ್ನು ರಸ್ತೆ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.
ಅವರು ನಗರದ ಐ.ಟಿ. ಪಾರ್ಕನ ಕೆ.ಯು.ಡಿ.ಎಫ್.ಸಿ ಸಭಾಂಗಣದಲ್ಲಿ ಜರುಗಿದ ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ, ನಗರಾಭಿವೃದ್ಧಿ ಪ್ರಾಧಿಕಾರ, ಕ.ನ.ನಿ.ಸ ಮತ್ತು ಒಳಚರಂಡಿ ಮಂಡಳಿ ಹಾಗೂ ಕೆ.ಯು.ಐ.ಡಿ.ಎಫ್.ಸಿ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮಹಾನಗರ ಪಾಲಿಕೆಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 150 ಕೋಟಿ, 15 ಹಣಕಾಸು ಯೋಜನೆ ಅಡಿ 51.50 ಕೋಟಿ, ಎಸ್.ಎಫ್.ಸಿ, ಮುಖ್ಯ ನಿಧಿ, ಎಸ್.ಇ.ಪಿ. ಟಿ.ಎಸ್.ಪಿ ಸೇರಿದಂತೆ ಎಲ್ಲಾ ಯೋಜನೆಗಳಿಂದ 229 ಕೋಟಿ ಹಣವನ್ನು ನೀಡಲಾಗಿದೆ.
ಇದನ್ನು ರಸ್ತೆ ಅಭಿವೃದ್ಧಿಗಾಗಿ ವ್ಯಯಿಸಲು ಸರ್ಕಾರ ಬದ್ದವಾಗಿದೆ.
ನಗರ ವಿಕಾಸ ಯೋಜನೆಯ ಕಾರ್ಯಯೋಜನೆ ಸಿದ್ದವಿದ್ದು ಶೀಘ್ರವೇ ಟೆಂಡರ್ ಕರೆದು ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಬರುವ ಬೇಸಿಗೆಯಲ್ಲಿ ನಗರದ ಎಲ್ಲಾ ರಸ್ತೆ ಹಾಗೂ ಒಳಚರಂಡಿಗಳನ್ನು ದುರಸ್ತಿ ಮಾಡಲಾಗುವುದು.
ಮಹಾನಗರ ವ್ಯಾಪ್ತಿಯಲ್ಲಿ 77 ಕೋಟಿ ವೆಚ್ಚದಲ್ಲಿ ಎಲ್.ಇ.ಡಿ. ಲೈಟ್ ಅಳವಡಿಸಲು ಕಾರ್ಯಾದೇಶ ನೀಡಲಾಗುವುದು ಎಂದು ಹೇಳಿದರು.
ರಾಜ್ಯದ ಎಲ್ಲಾ ಮಹಾ ನಗರಗಳಿಗೆ ಮೇಲಿಂದ ಮೇಲೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಹುಬ್ಬಳ್ಳಿ-ಧಾರವಾಡಕ್ಕೂ ನಾಲ್ಕೈದು ಬಾರಿ ಭೇಟಿ ನೀಡಿ ಜನಪ್ರತಿನಿಧಿಗಳೊಂದಿಗೆ ನಗರ ಅಭಿವೃದ್ಧಿ ಕುರಿತು ಚರ್ಚಿಸಿದ್ದೇನೆ.
ಕಳೆದ ಬಾರಿ ಭೇಟಿ ನೀಡಿದಾಗ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಮಾಡಿದ್ದು, ಘಟಕ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ನಗರದ ಹೊರ ವಯಲದಲ್ಲಿ ಶೇಖರಣೆಯಾಗಿರುವ ತ್ಯಾಜ್ಯಗಳ ವಿಲೇವಾರಿಗೆ ಪಾಲಿಕೆ ವತಿಯಿಂದ 51 ಕೋಟಿ ರುಪಾಯಿಗಳ ಯೋಜನೆ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಮುಂದಿನ ಆಯವ್ಯಯದಲ್ಲಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು ಎಂದು ವಿವರಿಸಿದರು.