ಬೆಂಗಳೂರು prajakiran.com : ಮಂಗಳಮುಖಿಯರಿಗೆ ರಾಜ್ಯದ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿಯೂ ಶೇ.1 ರಷ್ಟು ಹುದ್ದೆಗಳನ್ನು ಮೀಸಲಿಡುವ ಸಂಬಂಧ ಈಗಾಗಲೇ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ತಿಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲ ವಿಜಯಕುಮಾರ್ ಪಾಟೀಲ್ ಅವರು ಪೀಠಕ್ಕೆ ಮಾಹಿತಿ ನೀಡಿದರು.
ಸರ್ಕಾರದ ಎಲ್ಲ ಹುದ್ದೆಗಳಲ್ಲಿಯೂ ಶೇ.1ರಷ್ಟು ಹುದ್ದೆಗಳನ್ನು ಮಂಗಳಮುಖಿರಿಗೆ ಮೀಸಲಿಡಲು ಕ್ರಮ ಕೈಗೊಳ್ಳಲಾಗಿದೆ.
ಅದರಂತೆ ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆ ಮಾಡಲಾಗುತ್ತಿದೆ. ಈ ಕುರಿತಂತೆ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ ಎಂದರು.
ಕರಡು ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮಗೊಳಿಸಲಾಗುವುದು.
ಅದಕ್ಕೆ ಕಾಲಾವಕಾಶಕ್ಕಾಗಿ ನ್ಯಾಯಾಲಯವನ್ನು ಕೋರಿದರು. ನ್ಯಾಯಾಲಯ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿತು.