ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಗೊಂಡಿದೆ.
ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ
ನ್ಯಾಯಾಧೀಶರಾದ ಗಂಗಾಧರ ಸಿ.ಎಂ ಅವರು ಮಂಗಳವಾರ ಅರ್ಜಿ ವಿಚಾರಣೆ ನಡೆಸಿ, ಮತ್ತೆ ಡಿಸೆಂಬರ್ 28ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.
ಮಾಜಿ ಸಚಿವ ವಿನಯ ಕುಲಕರ್ಣಿ
14 ದಿನಗಳ ನ್ಯಾಯಾಂಗ ಬಂಧನ ಅವಧಿ ಇವತ್ತಿಗೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ ಮತ್ತೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.
ಇದರಿಂದಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇನ್ನಷ್ಟು ದಿನ ಕಾಲ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.
ಇದೇ ವೇಳೆ ಡಿ. 22ರಂದು ಹೈಕೋರ್ಟ್ ನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ಅದಕ್ಕೆ ಸಿಬಿಐ ಅಧಿಕಾರಿಗಳು ತಕರಾರು ಅರ್ಜಿಯನ್ನು ಅಂದು ಸಲ್ಲಿಸಲಿದ್ದಾರೆಯೇ ಅಥವಾ ಮತ್ತಷ್ಟು ಹೆಚ್ಚಿನ ಸಮಯಾವಕಾಶ ನೀಡಿ ಎಂದು ಕೇಳಲಿದ್ದಾರೆಯೇ ಎಂಬುದು ಕಾದು ನೋಡಬೇಕು.