ಧಾರವಾಡ prajakiran.com : ಸಹಕಾರ ಇಲಾಖೆ, ಕೋವಿಡ್-19ರ ಸಂಕಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೂಪಿಸಿದ ವಿವಿಧ ಯೋಜನೆಗಳಡಿ ಬೆಳಗಾವಿ ಪ್ರಾಂತದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಸಹಯೋಗದಲ್ಲಿ ನವೆಂಬರ್ 13 ರಂದು ಬೆಳಿಗ್ಗೆ 10:30 ಕ್ಕೆ ಧಾರವಾಡ ಕಲಾಭವನದಲ್ಲಿ ಆರ್ಥಿಕ ಸ್ಪಂದನ ಸಾಲ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಬಾಪೂಗೌಡ ಪಾಟೀಲ ಹೇಳಿದರು .
ಅವರು ರಾಯಾಪುರದ ಕೆಎಂಎಫ್ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಮಾಹಿತಿ ನೀಡಿದರು.
ಕೋವಿಡ್ -19 ರ ಸಂಕಟದ ಸಮಯದಲ್ಲಿ ರೈತರು ಹಾಗೂ ಜನಸಾಮಾನ್ಯರು ಯಾವುದೇ ರೀತಿಯ ಆರ್ಥಿಕ ಸಂಕಟಗಳಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಆರ್ಥಿಕ ಸ್ಪಂದನ’ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಅಡಿಯಲ್ಲಿ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಸಹಕಾರ ಇಲಾಖೆ ಮೂಲಕ ಫಲಾನುಭವಿಗಳಿಗೆ ಸಾಲ ವಿತರಿಸುವ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ.
ಈ ಯೋಜನೆಯಡಿ ರಾಜ್ಯಕ್ಕೆ 4525 ರೂ.ಕೋಟಿಗಳ ಆರ್ಥಿಕ ನೆರವನ್ನು ಹಂಚಿಕೆ ಮಾಡಲಾಗಿದೆ.
ವಿಶೇಷವಾಗಿ ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸುವ ಯೋಜನೆಯಡಿಯಲ್ಲಿ ಬೆಳಗಾವಿ ಪ್ರಾಂತದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ 5,340 ಸದ್ಯಸರಿಗೆ ರೂ.16.33 ಕೋಟಿಗಳ ಹೈನುಗಾರಿಕೆ ಸಾಲ ವಿತರಿಸಲಾಗಿದೆ.
ಕೇಂದ್ರ ಸರ್ಕಾರದ ಅಗ್ರಿ ಇನ್ಫ್ರಾ ಫಂಡ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಗೋದಾಮುಗಳ ನಿರ್ಮಾಣ,ಕೊಯ್ಲು ನಂತರದ ಸಂಸ್ಕರಣೆ,ಕೃಷಿ ಉತ್ಪನ್ನಗಳನ್ನು ಸಾಗಾಣಿಕೆ ಮಾಡಲು ಸಾರಿಗೆ ವ್ಯವಸ್ಥೆ ಕಲ್ಪಿಸುವ ಯೋಜನೆಗಳನ್ನು ರೂಪಿಸಿಕೊಂಡು,ಕೃಷಿ ಪತ್ತಿನ ಸಹಕಾರ ಸಂಘಗಳು ಬಹು ಉಪಯೋಗಿ ಸೇವಾ ಕೇಂದ್ರಗಳಾಗಿ ಪರಿವರ್ತನೆಗೊಳಿಸಿ ಆರ್ಥಿಕ ಚೈತನ್ಯ ನೀಡಲಾಗುತ್ತದೆ ಎಂದರು.
ಈಗಾಗಲೇ ಈ ಕಾರ್ಯಕ್ರಮದಡಿಯಲ್ಲಿ ಬೆಳಗಾವಿ ವಿಭಾಗದಲ್ಲಿ ವಿವಿಧ ಯೋಜನೆಗಳಲ್ಲಿ ಸುಮಾರು 9500 ರೂ.ಕೋಟಿ ಸಾಲ ವಿತರಿಸಲಾಗಿದೆ.
ಈ ಮೂಲಕ ರೈತರು,ಹೈನುಗಾರಿಕೆ, ಕುರಿ ಹಾಗೂ ಆಡು ಸಾಕಾಣಿಕೆದಾರರು,ಮೀನುಗಾರರು,ಬೀದಿಬದಿ ವ್ಯಾಪಾರಿಗಳು, ಮಹಿಳಾ ಸ್ವ ಸಹಾಯ ಗುಂಪುಗಳ ಸದ್ಯಸರು,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ನೆರವು ಪಡೆಯಲಿದ್ದಾರೆ.
ಅಂದಾಜು 22 ಕೋಟಿಗಳ ಸಾಲಗಳ ಚೆಕ್ಕುಗಳನ್ನು ವಿತರಿಸಲು ಆರ್ಥಿಕ ಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮವನ್ನು ಸಹಕಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಅರವಿಂದ ಬೆಲ್ಲದ ವಹಿಸಲಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರ ಘನ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಜಿಲ್ಲಾ ಪಂಚಾಯತ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಪೇಗೌಡ ಪಾಟೀಲ,ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಮೋಹನ್ ಲಿಂಬಿಕಾಯಿ,ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷರು ಹಾಗೂ ನವಲಗುಂದ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ,ಪ್ರದೀಪ ಶೆಟ್ಟರ್, ಶಾಸಕರಾದ ಪ್ರಸಾದ ಅಬಯ್ಯ,ಅಮೃತ ದೇಸಾಯಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಧಾರವಾಡ ಕೆಎಂಎಫ್ ಅಧ್ಯಕ್ಷ ಬಸವರಾಜ ಅರಬಗೊಂಡ,ಕೆಸಿಸಿ ಬ್ಯಾಂಕ್ ನಿರ್ದೇಶಕರಾದ ಜಿ.ಪಿ ಪಾಟೀಲ, ಮಲ್ಲಿಕಾರ್ಜುನ ಹೊರಕೇರಿ,ಉಮೇಶ ಬೂಮಣ್ಣವರ, ಉಪಾಧ್ಯಕ್ಷರು ಎಸ್.ವಾಯ್ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.