ಕೆ.ಆರ್. ಪೇಟೆ prajakiran.com : ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೃಷ್ಣ ಅವರು ಇಹಲೋಕ ತ್ಯಜಿಸಿದರು.
ಅವರು ಚೆನ್ನೈ ನ ಅಪೋಲೋ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಶುಕ್ರವಾರ ಚಿಕಿತ್ಸೆ ಫಲಿಸದೆ ವಿಧಿವಶರಾದರು.
ಅವರು ಪತ್ನಿ ಇಂದ್ರಮ್ಮ, ಪುತ್ರಿ ಮಂಜುಳಾ, ಅಳಿಯ ಶ್ರೀಧರ್ ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕೃಷ್ಣ ಅವರ ಸ್ವಗ್ರಾಮ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಎಸ್.ಆರ್.ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರೇಷ್ಮೆ ಮತ್ತು ಪಶುಸಂಗೋಪನೆ ಸಚಿವರಾಗಿದ್ದ ಕೃಷ್ಣ ಮೂರು ಅವಧಿಗೆ ಕೆ.ಆರ್.ಪೇಟೆ ಶಾಸಕರಾಗಿದ್ದರು.
ಹೆಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಗಳಾಗಿದ್ದಾಗ ಮಂಡ್ಯ ಜಿಲ್ಲೆಯಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು..
ರಾಜಕೀಯ ರಂಗದಲ್ಲಿ ಸರಳತೆ ಸಜ್ಜನಿಕೆ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದ ಕೃಷ್ಣ ಹಿರಿಯ ಗಾಂಧಿವಾಧಿಯಾಗಿದ್ದು ಮಂಡ್ಯದ ಗಾಂಧಿಯೆಂದೇ ಪ್ರಖ್ಯಾತರಾಗಿದ್ದರು.