ಧಾರವಾಡ prajakiran.com : ಕರ್ನಾಟಕದ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ದೂರ ಶಿಕ್ಷಣ ಮುಖಾಂತರ ನೀಡಲಾಗುತ್ತಿರುವ ಕೋರ್ಸ್ ಗಳಿಗೆ ರಾಜ್ಯ ಸರ್ಕಾರ ಅನುಮತಿ ರದ್ದುಗೊಳಿಸಿರುವುದು ಸರಿಯಾದ ಬೆಳವಣಿಗೆ ಅಲ್ಲ ಎಂದು ಅಖಿಲ ಭಾರತ ಶಿಕ್ಷಕರ ಫೆಡರೇಷನ್ ಉಪಾಧ್ಯಕ್ಷ ಬಸವರಾಜ ಗುರಿಕಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಈ ನಿರ್ಣಯವನ್ನು ಮರುಪರಿಶೀಲಿಸಿ, ಅವಕಾಶ ಮುಂದುವರೆಸಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಈ ನಿರ್ಣಯದಿಂದಾಗಿ ರಾಜ್ಯದಲ್ಲಿ ದೂರ ಶಿಕ್ಷಣ ಪಡೆಯಲು ಬಯಸುವ ಲಕ್ಷಾಂತರ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯವು ೨೦೧೩ ರಿಂದ ೨೦೧೮ ರವರೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆ ರದ್ದಾಗಿದ್ದ ಸಂದರ್ಭದಲ್ಲಿಯೂ, ಕುವೆಂಪು, ಹಂಪಿ, ಕರ್ನಾಟಕ ವಿಶ್ವವಿದ್ಯಾಲಯವು ರಾಜ್ಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಿದೆ.
ದೂರ ಶಿಕ್ಷಣದ ಮೂಲಕ ಉನ್ನತ ಶಿಕ್ಷಣ ಮುಂದುವರೆಸುವುದು ಸರ್ಕಾರಕ್ಕೆ ಪ್ರತ್ಯೇಕವಾದ ಆರ್ಥಿಕ ಹೊರೆಯಾಗುವುದಿಲ್ಲ. ಆದ್ದರಿಂದ ದೂರ ಶಿಕ್ಷಣ ಮುಂದುವರೆಸಲು ಅನುಮತಿ ನೀಡಬೇಕು ಎಂದರು.
ಈಗಾಗಲೇ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೋಂದಣಿ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ.
ಜೊತೆ ಜೊತೆಗೆ ಎಲ್ಲ ವಿಶ್ವವಿದ್ಯಾಲಯಗಳಲ್ಲಿನ ಸಂಪ್ರದಾಯಿಕ ಕೋರ್ಸ್ ಗಳಿಗೆ ಕೂಡ ವಿದ್ಯಾರ್ಥಿಗಳ ಪ್ರವೇಶದಲ್ಲಿ ಗಣಿನೀಯ ಕುಸಿತ ಕಂಡಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.
ಹೀಗಾಗಿ ಪ್ರಸ್ತುತ ರಾಜ್ಯದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳ ದೂರ ಶಿಕ್ಷಣ ಕಾರ್ಯಕ್ರಮಗಳನ್ನು ಕೇವಲ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವೇ ಸೀಮಿತಗೊಳಿಸಿರುವುದನ್ನು ರದ್ದುಗೊಳಿಸಬೇಕೆಂದು ಬಸವರಾಜ ಗುರಿಕಾರ ಒತ್ತಾಯಿಸಿದ್ದಾರೆ.