ಬೆಂಗಳೂರು Prajakiran.com : ಮುಷ್ಕರನಿರತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬೊಮ್ಮಾಯಿ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಸಾರಿಗೆ ನೌಕರರ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಇಂದು ತಮ್ಮನ್ನು ಭೇಟಿ ಮಾಡಿದ್ದು, ಸಾರಿಗೆ ನೌಕರರ ವಿಷಯದ ಕುರಿತು ಪ್ರಸ್ತಾಪ ಮಾಡಿದರು.
ಮುಷ್ಕರ ಮಾಡಲು ಇದು ಸರಿಯಾದ ಸಮಯವಲ್ಲ. ಕೋವಿಡ್ ಎಲ್ಲರನ್ನು ಕಾಡುತ್ತಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಸರಿಯಾಗಿಲ್ಲ. ಜನ ತೊಂದರೆಯಲ್ಲಿದ್ದಾರೆ ಹೀಗಾಗಿ ತಾವು ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ನಿಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುತ್ತೇನೆ ಎಂದು ಮನವಿಯನ್ನು ಮಾಡಿದ್ದಾರೆ.